Kalaburagi | ಎಸ್ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವ ಪ್ರಯತ್ನ: ವಿ.ಆರ್. ಸುದರ್ಶನ ಆರೋಪ

ಕಲಬುರಗಿ, ಆ.1: ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್. ಸುದರ್ಶನ ಆರೋಪಿಸಿದರು.
ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಭದ್ರ ಅಡಿಪಾಯ ಹಾಕುವಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಹೊರಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ವ್ಯಾಪಕ ಸಿದ್ಧತೆ ನಡೆಸಿದ್ದು, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಜತೆ ಸಮನ್ವಯ ಸಾಧಿಸಲು ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ರಾಜ್ಯದಲ್ಲಿ 57,409 ಬೂತ್ ಮಟ್ಟದ ಏಜೆಂಟರನ್ನು (ಬಿಎಲ್ಎ) ನೇಮಿಸಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ನೇತೃತ್ವದಲ್ಲಿ ‘ವಾರ್ ರೂಮ್’ ಸ್ಥಾಪಿಸಿ, ಎಸ್ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಪ್ರತ್ಯೇಕ ಸಮಿತಿಯನ್ನೂ ರಚಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಸಂವಿಧಾನಬದ್ಧ ಸಂಸ್ಥೆಗಳನ್ನು ದುರುದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಬೆಂಬಲಿಗರು ಹಾಗೂ ಬಡ ವರ್ಗದ ಮತದಾರರನ್ನು ಗುರಿಯಾಗಿಸಿ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಳ್ಳದಂತೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ರಾಜ್ಯದ ಅನೇಕ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಮರ್ಪಕವಾಗಿ ಪ್ರದರ್ಶಿಸಲಾಗುತ್ತಿಲ್ಲ. ಒಂದೇ ಕುಟುಂಬದ ಸದಸ್ಯರ ಹೆಸರುಗಳು ವಿವಿಧ ವಾರ್ಡ್ಗಳಿಗೆ ವರ್ಗಾವಣೆಯಾಗಿರುವಂತಹ ದೋಷಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.
ಚುನಾವಣಾ ಆಯೋಗದ ಕಾರ್ಯಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಆದರೆ ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಅನುಸರಿಸಲಾಗುತ್ತಿರುವ ಕೆಲವು ವಿಧಾನಗಳ ವಿರುದ್ಧ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಾಗುತ್ತಿದೆ. ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಪ್ರಯತ್ನಗಳು ನಡೆಯುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು.
ಆರ್ಥಿಕ ತಜ್ಞ ಅಮರ್ತ್ಯ ಸೇನ್, ನಿವೃತ್ತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಹಾಗೂ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಂತಹ ಗಣ್ಯರ ಹೆಸರುಗಳೂ ಮತದಾರರ ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ ಎಂದು ಉಲ್ಲೇಖಿಸಿದ ಅವರು, ದಾಖಲೆಗಳ ಹೆಸರಿನಲ್ಲಿ ಅನಗತ್ಯ ತೊಂದರೆ ನೀಡಬಾರದು ಎಂದರು.
1951ರಲ್ಲಿ ದೇಶದ ಮೊದಲ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, ಸಾರ್ವತ್ರಿಕ ಚುನಾವಣೆಗಳು ಪ್ರಜಾಪ್ರಭುತ್ವದ ಬುನಾದಿಯನ್ನು ಗಟ್ಟಿಗೊಳಿಸಿವೆ. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಯಾವುದೇ ಅರ್ಹ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ ಹಾಗೂ ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ, ರೇಣುಕಾ ಸಿಂಗೆ, ಸುಭಾಷ್ ರಾಠೋಡ್, ವಾಣಿಶ್ರೀ ಸಗರಕರ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.






