Kalaburagi | ಶರಣಬಸವ ವಿವಿಯಲ್ಲಿ ಸಂಶೋಧನಾ, ನಾವೀನ್ಯತೆ, ಉದ್ಯಮಶೀಲತಾ ಕೇಂದ್ರ ಉದ್ಘಾಟನೆ

ಕಲಬುರಗಿ: ಮುಗುಳಖೋಡ ಜಿಡಗಾ ಮಠದ ಪೀಠಾಧಿಪತಿ ಡಾ.ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರು ಶರಣಬಸವ ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಡಾ.ಶರಣಬಸವಪ್ಪ ಅಪ್ಪಾಜಿ ಸಂಶೋಧನಾ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿದರು.
ಇದೇ ವೇಳೆ 200ಕ್ಕೂ ಅಧಿಕ ಅತ್ಯಾಧುನಿಕ ಕಂಪ್ಯೂಟರ್ಗಳು ಹಾಗೂ ಉನ್ನತ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ನವೀಕೃತ ಕಂಪ್ಯೂಟರ್ ಕೇಂದ್ರಗಳಿಗೂ ಚಾಲನೆ ನೀಡಲಾಯಿತು.
ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಮುರುಘರಾಜೇಂದ್ರ ಮಹಾಸ್ವಾಮೀಜಿ, ಈ ನೂತನ ಸೌಲಭ್ಯಗಳು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಶೋಧನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿವೆ ಎಂದು ಹೇಳಿದರು.
ಸಂಶೋಧನಾ ಉತ್ಕೃಷ್ಟತಾ ಕೇಂದ್ರಕ್ಕೆ ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಹೆಸರಿಡುವುದು ಸೂಕ್ತವಾಗಿದೆ. ಕಲಬುರಗಿ ಭಾಗದ ಶೈಕ್ಷಣಿಕ ಸಬಲೀಕರಣಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ದೂರದೃಷ್ಟಿಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಿದೆ ಎಂದು ಶ್ಲಾಘಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳು ಮತ್ತು ಶರಣಬಸವ ವಿಶ್ವವಿದ್ಯಾಲಯದ ಮೂಲಕ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಹಾಗೂ ಸಂಶೋಧನೆಗೆ ಹೊಸ ಅವಕಾಶಗಳು ಸೃಷ್ಟಿಯಾಗಿವೆ. ಜ್ಞಾನ ದಾಸೋಹದ ಪರಂಪರೆಯನ್ನು ಸಂಘ ಯಶಸ್ವಿಯಾಗಿ ಮುಂದುವರಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ದಾಕ್ಷಾಯಿಣಿ ಅವ್ವಾಜಿ ಮಾತನಾಡಿ, ಡಾ.ಅಪ್ಪಾಜಿ ಅವರು ಸಂಶೋಧನೆ ಮತ್ತು ನಾವೀನ್ಯತೆಗೆ ಸದಾ ಆದ್ಯತೆ ನೀಡುತ್ತಿದ್ದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಜ್ಞಾನ ಹಾಗೂ ಕೌಶಲ್ಯ ವೃದ್ಧಿಗಾಗಿ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಅವರ ಆಶಯವಾಗಿತ್ತು ಎಂದು ಸ್ಮರಿಸಿದರು.
ವಿಶ್ವವಿದ್ಯಾಲಯದಲ್ಲಿ ಆರಂಭಗೊಂಡಿರುವ ಈ ನೂತನ ಸಂಶೋಧನಾ ಕೇಂದ್ರವು ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರಿಗೆ ಸಲ್ಲಿಸುವ ಅರ್ಥಪೂರ್ಣ ಗೌರವವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಸ್ವಾಗತಿಸಿದರು. ಪ್ರೊ. ನಿರುಪಮಾ ವಂದನಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ನಿರ್ದೇಶಕ ಪ್ರೊ. ವಿ.ಡಿ. ಮೈತ್ರಿ, ಸಂಶೋಧನಾ ಡೀನ್ ಡಾ. ಸುಜಾತಾ ಮಲ್ಲಾಪುರ, ಡಾ. ಮಲ್ಲಿಕಾರ್ಜುನ ದೇಶಮುಖ ಸೇರಿದಂತೆ ಹಲವರು ಉಪಸ್ಥಿತರಿದ್ದರು.






