ಕಲಬುರಗಿ | ಪಿಐಓಗಳೊಂದಿಗೆ ಮುಖ್ಯ ಮಾಹಿತಿ ಆಯುಕ್ತರ ಸಂವಾದ : ಕಾಲಮಿತಿಯಲ್ಲಿ ಅರ್ಜಿ ವಿಲೇವಾರಿಗೆ ಸೂಚನೆ

ಕಲಬುರಗಿ : ಕರ್ನಾಟಕ ಮಹಾತಿ ಆಯೋಗದ ಮುಖ್ಯ ಆಯುಕ್ತ ಎ.ಎಂ.ಪ್ರಸಾದ್ ಅವರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಪ್ರಥಮ ಮೇಲ್ಮನವಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವ ವಿಧಾನ, ಸಕಾಲದಲ್ಲಿ ವಿಲೇವಾರಿ, ವರ್ಗಾವಣೆ, ಶುಲ್ಕ, ಪ್ರಥಮ ಮೇಲ್ಮನವಿ ವಿಚಾರಣೆ, ಆಯೋಗದಲ್ಲಿ ನಡೆಯುವ ವಿಚಾರಣ ಕುರಿತು ಕೂಲಂಕುಷವಾಗಿ ಅಧಿಕಾರಿಗಳಿಗೆ ಅರಿವು ಮೂಡಿಸಿದ ಆಯುಕ್ತರು, ತಮ್ಮ ಹಂತದಲ್ಲಿ ಯಾವುದೇ ಅರ್ಜಿ ಬಾಕಿ ಇಟ್ಟುಕೊಳ್ಳದೆ ಸಕಾಲದಲ್ಲಿ ಅರ್ಜಿ ವಿಲೇವಾರಿ ಮಾಡಬೇಕು. ಕಡ್ಡಾಯವಾಗಿ ಸೆಕ್ಷನ್ 4(1)ಎ ರಂತೆ ಅಗತ್ಯ ಮಾಹಿತಿ ಇಲಾಖೆಯ ಅಂತರ್ಜಾಲದಲ್ಲಿ ಸಾರ್ವಜನಿಕವಾಗಿ ಪ್ರಚಾರಪಡಿಸಬೇಕು ಎಂದು ಸೂಚನೆ ನೀಡಿದರು.
ಕಂದಾಯ, ನಗರ ಸ್ಥಳೀಯ ಸಂಸ್ಥೆ, ಪೋಲಿಸ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ, ಲೋಕೋಪಯೋಗಿ ಇಲಾಖೆ, ಜಲ ಸಂಪನ್ಮೂಲ ಸೇರಿದಂತೆ ಅನೇಕ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಪ್ರಥಮ ಮೇಲ್ಮನವಿ ಅಧಿಕಾರಿಗಳು ಭಾಗವಹಿಸಿದ್ದರು.
ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.
ಪ್ರಕರಣ ಇತ್ಯರ್ಥ:
ಕಲಬುರಗಿ ಪೀಠಕ್ಕೆ ಸಂಬಂಧಿಸಿದಂತೆ ಆಯೋಗದ ಕಲಬುರಗಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಮುಖ್ಯ ಆಯುಕ್ತ ಎ.ಎಂ. ಪ್ರಸಾದ್ ಅವರು, ವಾದ ವಿವಾದ ಆಲಿಸಿ ಸುಮಾರು ನೂರಾರು ಪ್ರಕರಣಗಳನ್ನು ಇತ್ಯರ್ಥಪಡಿಸಿದರು.
ಗುರುವಾರ ಕಲಬುರಗಿಯ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯ ಮಾಹಿತಿ ಆಯುಕ್ತರು ಕಾನೂನು ವಿದ್ಯಾರ್ಥಿಗಳಿಗೆ ಮಾಹಿತ ಹಕ್ಕು ಕಾಯ್ದೆಯ ಸಮಾನ್ಯ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಚಂದ್ರಶೇಖರ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾನೂನು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







