Kalaburagi | ದಲಿತ ಸಮುದಾಯಕ್ಕೆ ಕಾಂಗ್ರೆಸ್ ನಿರಂತರ ಅನ್ಯಾಯ: ಶಿವ ಅಷ್ಠಗಿ ಆರೋಪ

ಕಲಬುರಗಿ: ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮತಗಳನ್ನು ಪಡೆದು ಅಧಿಕಾರಕ್ಕೆ ಬರುತ್ತದೆ. ಆದರೆ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಉನ್ನತ ರಾಜಕೀಯ ಸ್ಥಾನಮಾನಗಳ ಹಂಚಿಕೆಯ ಸಂದರ್ಭದಲ್ಲಿ ದಲಿತ ನಾಯಕರನ್ನು ಕಡೆಗಣಿಸುವ ಮೂಲಕ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕ ಶಿವ ಅಷ್ಠಗಿ ಆರೋಪಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಹಲವು ಬಾರಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಿರುವ ಉದಾಹರಣೆಗಳಿವೆ ಎಂದು ಹೇಳಿದರು.
1980ರಲ್ಲಿ ಅಂದಿನ ಪ್ರಭಾವಿ ದಲಿತ ನಾಯಕ ಬಿ.ಬಸಲಿಂಗಪ್ಪ ಅವರಿಗೆ ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಲಾಯಿತು. 1999ರಲ್ಲಿ ಐದು ವರ್ಷಗಳ ಕಾಲ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ಮುನ್ನಡೆಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿ ಮತ್ತೊಬ್ಬರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅನ್ಯಾಯ ಮಾಡಲಾಯಿತು ಎಂದು ಅವರು ಆರೋಪಿಸಿದರು.
2013ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಡಾ.ಜಿ.ಪರಮೇಶ್ವರ್ ಅವರನ್ನು ರಾಜಕೀಯ ಕುತಂತ್ರದ ಮೂಲಕ ಚುನಾವಣೆಯಲ್ಲಿ ಸೋಲಿಸಿ ಮುಖ್ಯಮಂತ್ರಿ ಹುದ್ದೆಯಿಂದ ದೂರವಿರಿಸಲಾಯಿತು ಎಂದು ಅಷ್ಠಗಿ ಟೀಕಿಸಿದರು.
ಕಾಂಗ್ರೆಸ್ ಪಕ್ಷವು ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದ್ದು, ಅಧಿಕಾರ ಹಂಚುವ ಸಂದರ್ಭದಲ್ಲಿ ಮಾತ್ರ ಸಮುದಾಯವನ್ನು ನಿರ್ಲಕ್ಷಿಸುತ್ತಿದೆ ಎಂದು ಅವರು ದೂರಿದರು.
ಮತ ಕೇಳುವಾಗ ದಲಿತರು ನೆನಪಾಗುತ್ತಾರೆ. ಆದರೆ ಅಧಿಕಾರದ ಹಂಚಿಕೆಯ ಸಂದರ್ಭದಲ್ಲಿ ದಲಿತ ನಾಯಕರನ್ನು ಕಡೆಗಣಿಸಲಾಗುತ್ತದೆ. ದಲಿತ ಸಮುದಾಯ ಈ ರಾಜಕೀಯ ವಾಸ್ತವವನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ದಲಿತ ಸಮುದಾಯದ ರಾಜಕೀಯ ಪ್ರತಿನಿಧಿತ್ವ ಮತ್ತು ನಾಯಕತ್ವಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳು ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕೆಂದು ಶಿವ ಅಷ್ಠಗಿ ಆಗ್ರಹಿಸಿದರು.






