Kalaburagi | ‘ಬದಲಾವಣೆ ಅವಶ್ಯ’ ಘೋಷಣೆಯಡಿ ಆ.6ರಿಂದ ಸಿಪಿಐ ಬೃಹತ್ ಪಾದಯಾತ್ರೆ : ಮಹೇಶಕುಮಾರ್ ರಾಠೋಡ್

ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗದ ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ (ಸಿಪಿಐ) ವತಿಯಿಂದ “ಬದಲಾವಣೆ ಅವಶ್ಯ” ಎಂಬ ಘೋಷಣೆಯಡಿ ಆಗಸ್ಟ್ 6ರಿಂದ ಜಿಲ್ಲೆಯ 100 ಗ್ರಾಮಗಳಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ್ ರಾಠೋಡ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯು ಆಗಸ್ಟ್ 6ರಂದು ಜೇವರ್ಗಿ ತಾಲೂಕಿನ ಮದರಿ, ಆಳಂದ ತಾಲೂಕಿನ ರುದ್ರವಾಡಿ ಹಾಗೂ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮಗಳಿಂದ ಏಕಕಾಲದಲ್ಲಿ ಆರಂಭವಾಗಲಿದ್ದು, ಬಳಿಕ ಜಿಲ್ಲೆಯ 100 ಗ್ರಾಮಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಸಾರ್ವಜನಿಕ ಶೌಚಾಲಯ, ಶಾಲೆ, ಆರೋಗ್ಯ ಸೇವೆ ಹಾಗೂ ಬಸ್ ಸೌಲಭ್ಯ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧಿತ ಇಲಾಖೆಗಳು ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ತುರ್ತು ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು. ಗ್ರಾಮೀಣ ಭಾಗದ ಕೃಷಿ ಕೂಲಿಕಾರರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಡಲೇ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ನಿವೇಶನ ಹಾಗೂ ವಸತಿ ರಹಿತರಿಗೆ ಭೂಮಿ ಮೀಸಲಿರಿಸಿ ಮನೆ ನಿರ್ಮಿಸಿಕೊಡಬೇಕು. ಕಳೆದ ನಾಲ್ಕೈದು ತಿಂಗಳಿನಿಂದ ಸ್ಥಗಿತಗೊಂಡಿರುವ ವಿಧವಾ ವೇತನ, ವೃದ್ಧಾಪ್ಯ ವೇತನ, ವಯಸ್ಕರ ಪಿಂಚಣಿ ಹಾಗೂ ವಿಶೇಷಚೇತನರ ಸಹಾಯಧನವನ್ನು ತಕ್ಷಣ ಬಿಡುಗಡೆ ಮಾಡಿ, ಅದರ ಮೊತ್ತವನ್ನು ಕನಿಷ್ಠ 3,000 ರೂ. ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆಗಳು, ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಜೊತೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಭುದೇವ ಯಳಸಂಗಿ, ಭೀಮಾಶಂಕರ ಮಾಡಿಯಾಳ, ಸಿದ್ದಪ್ಪ ಫಾಲ್ಕಿ, ಸಾಜಿದ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.






