Kalaburagi | ʼದಸರಾ ಸಿಎಂ ಕಪ್–2026ʼ ಕ್ರೀಡಾಕೂಟಕ್ಕೆ ಚಾಲನೆ
ಕ್ರೀಡಾ ಸ್ಪೂರ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿ: ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: ಗೆಲುವು-ಸೋಲು ಮುಖ್ಯವಲ್ಲ; ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಸ್ಪೂರ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿ, ಸಂತಸದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಅತ್ಯಂತ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್–2026 ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ, ಬಲೂನ್ ಹಾರಿಸುವಿಕೆ ಮತ್ತು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವ, ಶಿಸ್ತು ಮತ್ತು ಕ್ರೀಡಾ ಸ್ಪೂರ್ತಿಯೇ ಮುಖ್ಯ. ಕ್ರೀಡಾಪಟುಗಳು ಯಾವುದೇ ಭೇದಭಾವವಿಲ್ಲದೆ ಉತ್ಸಾಹದಿಂದ ಸ್ಪರ್ಧಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿರುವ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂಬುದನ್ನು ಅಧಿಕಾರಿಗಳಿಂದ ಪರಿಶೀಲಿಸಿದ ಅವರು, ಕುಡಿಯುವ ನೀರು, ಆಹಾರ ಮತ್ತು ತುರ್ತು ಆರೋಗ್ಯ ಸೇವೆಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಲ್ಲ ಕ್ರೀಡಾಪಟುಗಳಿಗೆ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಲ್ಲಾ ಮಟ್ಟದ ಈ ಕ್ರೀಡಾಕೂಟದಲ್ಲಿ ಕಬಡ್ಡಿ, ಖೋ-ಖೋ, ಥ್ರೋಬಾಲ್, ಯೋಗ, ಫುಟ್ಬಾಲ್, ಅಥ್ಲೆಟಿಕ್ಸ್ ಮತ್ತು ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ್, ಕರ್ನಾಟಕ ರಾಜ್ಯ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಭೋಜನಗೌಡ ಪಾಟೀಲ್, ಸಂಜಯ ಬಾಣದ, ಪ್ರವೀಣ ಪುಣೆ, ರಾಜು ಚೌವ್ಹಾಣ ಸೇರಿದಂತೆ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.






