ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪತಿಯ ಪ್ರತಿಷ್ಠಾಪನೆಗೆ ಡಿಸಿ ಬಿ.ಫೌಝಿಯಾ ತರನ್ನುಮ್ ಕರೆ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು ಮಿಲಾದ್ ಉನ್ ನಬಿ ಈದ್-ಎ-ಮಿಲಾದ್ ಹಬ್ಬ ಒಟ್ಟಾಗಿಯೆ ಬಂದಿರುವುದರಿಂದ ಎರಡು ಧರ್ಮೀಯರು ಸೌಹಾರ್ದಯುತವಾಗಿ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿ.ಓ.ಪಿ. ಗಣಪ ಬಳಸದೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಕಾಳಜಿ ಪ್ರದರ್ಶಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಹ 3 ದಿನಗಳ ಮುಂಚಿತವಾಗಿ ಇದೇ ರೀತಿಯ ಶಾಂತಿ ಸಭೆ ನಡೆಸಿ ಸಂಘ-ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಮಾತನಾಡಿ, ಕಲಬುರಗಿ ನಗರದಲ್ಲಿ 500ಕ್ಕೂ ಹೆಚ್ಚು ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಗಣೇಶ ಪೆಂಡಾಲ್ಗೆ ಮಹಿಳೆಯರು, ಮಕ್ಕಳು ಬರುವುದರಿಂದ ಸಾರ್ವಜನಿಕರನ್ನು ನಿಯಂತ್ರಿಸಲು ಆಯೋಜಕರು ಸ್ವಯಂ ಸೇವಕರನ್ನು ನಿಯೋಜಿಸಬೇಕು. ಸಾಧ್ಯವಾದರೆ ಸಿ.ಸಿ.ಟಿ.ವಿ. ಅಳವಡಿಸಿದಲ್ಲಿ ಇನ್ನು ಉತ್ತಮ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಮಾತನಾಡಿ, ಕಲಬುರಗಿ ನಗರ ವ್ಯಾಪ್ತಿಯಲ್ಲಿ ಗಣೇಶ ವಿಸರ್ಜನೆಗೆ ಗುರುತಿಸಲಾದ ಸ್ಥಳದಲ್ಲಿ ಕ್ರೇನ್ ಸೌಲಭ್ಯ ಒದಗಿಸಲಾಗುವುದು. ಮೆರವಣಿಗೆ ಸರಾಗವಾಗಿ ಹೋಗಲು ರಸ್ತೆ ಗುಂಡಿ ಮುಚ್ಚಲಾಗುವುದು. ಬೀದಿ ದೀಪ ಸರಿಪಡಿಸಲಾಗುವುದು. ಪ್ರತಿ ಪೆಂಡಾಲ್ ಬಳಿ ಕಸ ಸಂಗ್ರಹಿಸಿ ಒಂದೆಡೆ ಇಟ್ಟಿದಲ್ಲಿ ಸ್ವಚ್ಛತಾ ಕಾರ್ಮಿಕರು ಪ್ರತಿ ದಿನ ಬಂದು ತೆಗೆದುಕೊಂಡು ಹೋಗಲಿದ್ದಾರೆ ಎಂದರು.
ಸುಳ್ಳು ಸುದ್ದಿಗೆ ಕಿವಿಗೊಡಬೇಡಿ:
ಹಬ್ಬದ ಸಂದರ್ಭದಲ್ಲಿ ಸೌಹಾರ್ದತೆಗೆ ಧಕ್ಕೆ ತರಲು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡಿ ಕೋಮ ಗಲಭೆಗೆ ಅಸ್ಪದ ನೀಡುವ ವಿಡಿಯೋಗಳನ್ನು ವೈರಲ್ ಮಾಡಿ ಕಾನೂನು ಸುವ್ಯವಸ್ಥೆ ಧಕ್ಕೆ ತರುವ ಸಾಧ್ಯತೆ ಇದ್ದು, ಇಂತಹ ಯಾವುದೇ ಫೋಸ್ಟ್ ಬಂದಲ್ಲಿ ಅದನ್ನು ಫಾರ್ವಾಡ್ ಮಾಡುವ ಮುನ್ನ ಅದರ ಸತ್ಯಾಸತ್ಯತೆ ಅರಿಯಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವು ವಿಚಾರವಾದರೆ ಕೂಡಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದ ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು, ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದರು.
ಶಾಂತಿ ಸಮಿತಿ ಸದಸ್ಯ ಬಾಬುರಾವ ಜಹಾಗಿರದಾರ್, ಖಾಜಿ ರಿಜ್ವಾನ್ ಉರ್ ರೆಹಮಾನ್ ಸಿದ್ದಿಕ್ಕಿ, ಮುಖಂಡರು ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಅಬಕಾರಿ ಉಪ ಅಯುಕ್ತ ಸಂಗಣಗೌಡ ಬಿರಾದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಧಾರ್ಮಿಕ ಮುಖಂಡರು, ಗಣ್ಯರು ಭಾಗವಹಿಸಿದ್ದರು.







