ಕಲಬುರಗಿ | ಹಾಸ್ಟೆಲ್ ಗುತ್ತಿಗೆ ನೌಕರರೊಂದಿಗೆ ಡಿಸಿ ಸಭೆ ಯಶಸ್ವಿ: ಮುಷ್ಕರ ವಾಪಸ್ ಪಡೆದ ನೌಕರರು

ಕಲಬುರಗಿ : ಜಿಲ್ಲೆಯ ಸಮಾಜ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿರುವ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಡಿಸಿ ಬಿ.ಫೌಝಿಯಾ ತರನ್ನುಮ್ ಅವರು ನೌಕರರ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ.
ಶುಕ್ರವಾರ ಈ ಸಂಬಂಧ ಡಿಸಿ ಅವರು, ಮೂರು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಗುತ್ತಿಗೆ ನೌಕರರ ಮುಖಂಡರೊಂದಿಗೆ ಸಭೆ ನಡೆಸಿ, ಕನಿಷ್ಠ ವೇತನ ನಿಗದಿ ಮಾಡುವ ಕೆಲಸ ಸರ್ಕಾರದ ಹಂತದಲ್ಲಿ ಆಗಬೇಕಾಗಿರುವುದರಿಂದ ಸರ್ಕಾರದ ಗಮನಕ್ಕೆ ತರಲಾಗುವುದು. ಇನ್ನು ಬೀದರ್ ಮಾದರಿ ಕಲಬುರಗಿಯಲ್ಲಿ ಸಹಕಾರಿ ಸ್ಥಾಪನೆ ಸ್ಥಾಪಿಸಲು ಸಹಮತಿಸಿ ಆಯಾ ಇಲಾಖೆಗಳು ಇಲಾಖಾ ಮುಖ್ಯಸ್ಥರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸುವಂತೆ ಇಲಾಖಾ ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು.
ಕನಿಷ್ಠ ವೇತನ 30 ಸಾವಿರ ರೂ. ಹೆಚ್ಚಿಸಬೇಕು ಮತ್ತು ಬೀದರ್ ಮಾದರಿಯಲ್ಲಿ ಜಿಲ್ಲೆಯಲ್ಲಿ ಸರ್ಕಾರದಿಂದಲೇ ಸಹಕಾರಿ ಸಂಸ್ಥೆ ಸ್ಥಾಪಿಸಿ ಅದರ ಮೂಲಕ ಗುತ್ತಿಗೆ ಸೇವೆ ಪಡೆದು ಸದರಿ ಸಂಸ್ಥೆಯಿಂದಲೇ ನೌಕರರಿಗೆ ವೇತನ ಪಾವತಿ ಮಾಡಬೇಕೆಂಬ ಪ್ರಮುಖ ಬೇಡಿಕೆ ಈಡೇರಿಕೆಗೆ ಕಳೆದ ಒಂದು ವಾರದಿಂದ ಮೂರು ಇಲಾಖೆಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು, ಗ್ರೂಪ್ ‘ಡಿ’, ಸ್ವಚ್ಛತಾ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1,000 ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಎಂ.ಅಲ್ಲಾಭಕ್ಷ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕರಂಗಿ, ನೌಕರರ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಎಂಪಳ್ಳಿ ಸೇರಿದಂತೆ ಮತ್ತಿತರ ನೌಕರ ಸಂಘದ ಪ್ರತಿನಿಧಿಗಳು ಇದ್ದರು.







