Kalaburagi | ಜುಲೈ ಅಂತ್ಯದೊಳಗೆ ತಂಬಾಕು ಮುಕ್ತ ಗ್ರಾಮ ಘೋಷಿಸಿ : ರಾಯಪ್ಪ ಹುಣಸಗಿ

ಕಲಬುರಗಿ : ತಂಬಾಕು ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ ಒಂದು ಗ್ರಾಮವನ್ನಾದರೂ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಜೂನ್ ಅಂತ್ಯದೊಳಗೆ ಜಿಲ್ಲೆಯ 261 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚಿಸಿ, ಗ್ರಾಮಸಭೆಗಳಲ್ಲಿ ತಂಬಾಕು ಮುಕ್ತ ಗ್ರಾಮ ಕುರಿತು ಚರ್ಚಿಸಬೇಕು ಎಂದು ಸೂಚಿಸಿದರು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಗ್ರಾಮ ಮಟ್ಟದಲ್ಲಿ ಜನಜಾಗೃತಿ ಮೂಡಿಸಬೇಕು. ತಂಬಾಕು ಸೇವನೆ ಮಾಡದ ಸ್ಥಳೀಯ ಪ್ರಮುಖ ವ್ಯಕ್ತಿಗಳು ಅಥವಾ ಧಾರ್ಮಿಕ ಮುಖಂಡರನ್ನು ರಾಯಭಾರಿಗಳಾಗಿ ಆಯ್ಕೆ ಮಾಡಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.
ಜಿಲ್ಲೆಯ 3,883 ಶಾಲೆಗಳ ಪೈಕಿ 927 ಶಾಲೆಗಳು ಹಾಗೂ 285 ಪದವಿ ಪೂರ್ವ ಕಾಲೇಜುಗಳ ಪೈಕಿ 79 ಕಾಲೇಜುಗಳು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳೆಂದು ಘೋಷಿಸಲ್ಪಟ್ಟಿವೆ. ಉಳಿದ ಶಾಲಾ-ಕಾಲೇಜುಗಳನ್ನೂ ಜೂನ್ 25ರೊಳಗೆ ತಂಬಾಕು ಮುಕ್ತ ಪ್ರದೇಶಗಳೆಂದು ಘೋಷಿಸಿ ವರದಿ ಸಲ್ಲಿಸುವಂತೆ ಡಿಡಿಪಿಐ ಹಾಗೂ ಡಿಡಿಪಿಯು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003ರ ಪ್ರಕಾರ ಶಾಲೆ ಮತ್ತು ಕಾಲೇಜುಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಸ್ಥಳೀಯ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ತಿಳಿಸಿದರು.
ಲೈಸೆನ್ಸ್ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿರುವುದು ನಿಯಮಬಾಹಿರವಾಗಿದ್ದು, ಮಾರಾಟಗಾರರಿಗೆ ಲೈಸೆನ್ಸ್ ನೀಡುವ ಜೊತೆಗೆ ನಿಯಮಗಳ ಕುರಿತು ಅರಿವು ಮೂಡಿಸಬೇಕು ಎಂದರು. ತಂಬಾಕು ಉತ್ಪನ್ನಗಳನ್ನು ಆಹಾರ ಪದಾರ್ಥಗಳೊಂದಿಗೆ ಇರಿಸಬಾರದು. ಕೋಟ್ಪಾ ಕಾಯ್ದೆ-2003 ಉಲ್ಲಂಘಿಸಿದ ಅಂಗಡಿಗಳ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜೂನ್ 2ರಂದು ವಿಶ್ವ ತಂಬಾಕು ದಿನಾಚರಣೆ :
ಜೂನ್ 2ರಂದು ವಿಶ್ವ ತಂಬಾಕು ದಿನಾಚರಣೆ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಅಂಗವಾಗಿ ಚಿತ್ರಕಲಾ ಸ್ಪರ್ಧೆ, ಜಾಗೃತಿ ಜಾಥಾ, ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಂದ ಮೈಮ್ ಸ್ಕಿಟ್ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಮುಂದೆ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸುವವರಿಗೆ ಕನಿಷ್ಠ 1,000 ರೂ. ದಂಡ ವಿಧಿಸಬೇಕು ಹಾಗೂ ಜೂನ್ 4ರಂದು ಜಿಲ್ಲೆಯಾದ್ಯಂತ ವಿಶೇಷ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ವಿಭಾಗೀಯ ತಂಬಾಕು ನಿಯಂತ್ರಣ ಕೋಶದ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ ಹಾಗೂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಜಾತಾ ಪಾಟೀಲ ಅವರು ಕೋಟ್ಪಾ ಕಾಯ್ದೆ ಜಾರಿಯ ಪ್ರಗತಿ, ದಾಳಿ, ದಂಡ ಹಾಗೂ ತಂಬಾಕು ಮುಕ್ತ ಗ್ರಾಮಗಳ ನಿರ್ಮಾಣ ಕುರಿತು ಮಾಹಿತಿ ನೀಡಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ಕೆ ಅಪರ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಡಿ.ಎಚ್.ಓ. ಡಾ.ಶರಣಸಬಪ್ಪ ಕ್ಯಾತನಾಳ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ರಾಕೇಶ್ ಕಾಂಬ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್, ಕಲಬುರಗಿ ಟಿ.ಎಚ್.ಓ ಡಾ. ಮಾರುತಿ ಕಾಂಬ್ಳೆ, ಅಫಜಲಪೂರ ಟಿ.ಎಚ್.ಓ ಡಾ ಚೇತನ್ ದುಮಾಲೆ, ಸೋಶಿಯಲ್ ವರ್ಕರ್ ಆರತಿ ಧನಶ್ರೀ, ಜಿಲ್ಲಾ ಸೈಕ್ಯಾಟ್ರಿಕ್ ಕೌನ್ಸಿಲರ್ ಮಂಜುನಾಥ ಕಂಬಾಳಿಮಠ, ಡಿ.ಇ.ಓ. ರವಿಕುಮಾರ್ ಪೂಜಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.






