Kalaburagi | 48 ಗಂಟೆಯೊಳಗೆ ಬಿ.ಎಡ್ ಫಲಿತಾಂಶ ಪ್ರಕಟಿಸಿ: ಗುಲ್ಬರ್ಗಾ ವಿವಿಗೆ ಅಹಿಂದ ವೇದಿಕೆ ಎಚ್ಚರಿಕೆ

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯವು 2018–19ನೇ ಸಾಲಿನ ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಬಾಕಿ ಉಳಿದಿರುವ ಫಲಿತಾಂಶವನ್ನು ತಕ್ಷಣ ಪ್ರಕಟಿಸಬೇಕು ಹಾಗೂ ಮಹೆಬೂಬ ಸುಬಾನಿ ಎಜುಕೇಷನ್ ಟ್ರಸ್ಟ್ ಅಧೀನದಲ್ಲಿರುವ ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಪದವಿ ಕಾಲೇಜುಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೈಬಣ್ಣಾ ಜಮಾದಾರ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಅವರ ಶೈಕ್ಷಣಿಕ ಭವಿಷ್ಯ ಹಾನಿಗೊಳಗಾಗಿದೆ ಎಂದು ಆರೋಪಿಸಿದರು.
ವಿಶ್ವವಿದ್ಯಾಲಯಕ್ಕೆ ಪಾವತಿಸಬೇಕಾದ ಶುಲ್ಕ ಸೇರಿದಂತೆ ಅಗತ್ಯ ಮಾನದಂಡಗಳನ್ನು ಶಿಕ್ಷಣ ಸಂಸ್ಥೆ ಸಕಾಲದಲ್ಲಿ ಪಾಲಿಸದಿರುವುದೇ ಈ ಸಮಸ್ಯೆಗೆ ಮೂಲ ಕಾರಣವಾಗಿದೆ ಎಂದು ಅವರು ಹೇಳಿದರು.
2017–18ನೇ ಸಾಲಿನಲ್ಲಿ ಇದೇ ಸಂಸ್ಥೆಯ ಅಧೀನದಲ್ಲಿದ್ದ ರಾಜೀವ್ ಗಾಂಧಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಫಲಿತಾಂಶ ವಿಳಂಬವಾದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆದಿತ್ತು. ಆ ವೇಳೆ ಫಲಿತಾಂಶ ಪ್ರಕಟಿಸಿ, ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪ್ರಸ್ತುತ 15 ಬಿ.ಎಡ್ ವಿದ್ಯಾರ್ಥಿಗಳ ಮೊದಲ, ಎರಡನೇ, ಮೂರನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಕ್ರೈಸ್ ಹಾಗೂ ಎಚ್ಎಸ್ಟಿಆರ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನ ಆಗಸ್ಟ್ 13 ಆಗಿರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ನ್ಯಾಯಾಲಯದ ಆದೇಶವಿದ್ದರೂ ವಿಶ್ವವಿದ್ಯಾಲಯ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಪ್ರತಿವರ್ಷ ದೂರುಗಳು ಬರುತ್ತಿದ್ದರೂ ಈ ಶಿಕ್ಷಣ ಸಂಸ್ಥೆಗೆ ಪ್ರವೇಶಾತಿಗೆ ಅನುಮತಿ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶ್ವವಿದ್ಯಾಲಯವು 48 ಗಂಟೆಗಳೊಳಗೆ ಬಾಕಿ ಫಲಿತಾಂಶ ಪ್ರಕಟಿಸಬೇಕು. ಇಲ್ಲವಾದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಸೈಬಣ್ಣಾ ಜಮಾದಾರ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಜು ಹೊಡಲ್ಕರ್, ಅಮರೇಶ್ ನರಚೆ, ಸಂತರಾಮ ಅಲಂಗೆ, ರಮೇಶ್ ಶಿಂಧೆ ಸೇರಿದಂತೆ ಇತರರು ಉಪಸ್ಥಿತರಿದ್ದರು.






