Kalaburagi | ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹ

ಕಲಬುರಗಿ : ಮುಂಗಾರು ಮಳೆ ವೈಫಲ್ಯದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕಲ್ಯಾಣ ಕರ್ನಾಟಕ ಭಾಗವನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಆಗ್ರಹಿಸಿದೆ.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡರು, ಎಲ್ ನಿನೊ ಪರಿಣಾಮ ಹಾಗೂ ಮಳೆ ಕೊರತೆಯಿಂದ ಮುಂಗಾರು ಬಿತ್ತನೆ ಕುಂಠಿತಗೊಂಡಿದೆ. ಮರುಬಿತ್ತನೆಗೆ ಮುಂದಾಗಿರುವ ರೈತರಿಗೆ ಅಗತ್ಯವಾದ ಬೀಜ ಮತ್ತು ರಸಗೊಬ್ಬರವನ್ನು ಸರ್ಕಾರ ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿರುವ ಕೃಷಿ ಸಾಲಗಳ ಮರುಪಾವತಿ ಅವಧಿಯನ್ನು ವಿಸ್ತರಿಸಬೇಕು. ಬಾಕಿ ಉಳಿದಿರುವ ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬರ ಪರಿಹಾರವಾಗಿ ಪ್ರತಿ ಎಕರೆಗೆ ₹30 ಸಾವಿರ ನೀಡುವುದರ ಜೊತೆಗೆ ರೈತರ ಸಾಲ ಮನ್ನಾ ಮಾಡುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬರ ಪರಿಸ್ಥಿತಿಯನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದ ಅವರು, ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಜೂನ್ ತಿಂಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಹೆಸರು, ಉದ್ದು ಸೇರಿದಂತೆ ಅಲ್ಪಾವಧಿ ಬೆಳೆಗಳು ಹಾನಿಗೊಳಗಾಗಿದ್ದು, ಸೋಯಾಬೀನ್, ಹತ್ತಿ ಮತ್ತು ತೊಗರಿ ಬೆಳೆಗಳ ಬೆಳವಣಿಗೆಯೂ ಕುಂಠಿತಗೊಂಡಿದೆ. ಸಾಲ ಮಾಡಿ ಕೃಷಿ ಆರಂಭಿಸಿರುವ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಮಹಾರಾಷ್ಟ್ರದ ಉಜನಿ ಅಣೆಕಟ್ಟಿನಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಬೇಕು. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ನೀರಿನ ವ್ಯವಸ್ಥೆ ಕಲ್ಪಿಸಬೇಕು. ದನಕರುಗಳಿಗೆ ಮೇವು ಒದಗಿಸಲು ಗೋಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಉದ್ಯೋಗದ ಕೊರತೆಯಿಂದ ಗ್ರಾಮೀಣ ಜನರು ವಲಸೆ ಹೋಗುತ್ತಿದ್ದು, ಸಾಲದ ಹೊರೆಯಿಂದ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವಿಶೇಷ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಬರಗಾಲ ಘೋಷಿಸಬೇಕು ಎಂದು ಒತ್ತಾಯಿಸಿದರು.
ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ಮಾಸಾಶನ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿಯು ಕಲಬುರಗಿ ಬಂದ್ಗೆ ಕರೆ ನೀಡಿದ್ದು, ಮೊದಲ ಹಂತದಲ್ಲಿ ನಗರದ ಪ್ರಮುಖ ರಿಂಗ್ರೋಡ್ಗಳಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿತು.
ಸುದ್ದಿಗೋಷ್ಠಿಯಲ್ಲಿ ರೈತ ಮೌಲಾ ಮುಲ್ಲಾ, ಉಮಾಪತಿ ಪಾಟೀಲ್, ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ, ಶಾಂತಾ ಸರಡಗಿ, ಮಲ್ಲಿನಾಥ ಪಾಟೀಲ್, ಸಾಜಿದ್ ಅಹ್ಮದ್ ಸೇರಿದಂತೆ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






