Kalaburagi | ನದಾಫ್–ಪಿಂಜಾರ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ವಿತರಿಸಲು ಒತ್ತಾಯ

ಕಲಬುರಗಿ, ಸೆ.20: ಕರ್ನಾಟಕ ರಾಜ್ಯದಲ್ಲಿ ಜಾರಿಯಲ್ಲಿರುವ ನಿಯಮಗಳಂತೆ ನದಾಫ್/ಪಿಂಜಾರ ಜನಾಂಗದ ಅರ್ಹ ಅಭ್ಯರ್ಥಿಗಳಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಆಳಂದ ತಾಲೂಕು ಘಟಕ ಆಗ್ರಹಿಸಿದೆ.
ಆಳಂದ ತಾಲೂಕಿನ ಮುನ್ನೊಳಿ ಗ್ರಾಮದಲ್ಲಿ ನಡೆದ ಪ್ರಜಾಸೇವೆ ಅಭಿಯಾನದ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ, ನದಾಫ್/ಪಿಂಜಾರ ಜನಾಂಗದ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ನೀಡುವ ವೇಳೆ ವರ್ಗಾವಣೆ ಪ್ರಮಾಣಪತ್ರದಲ್ಲಿರುವ ಜಾತಿ ವಿವರಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ಕೆಲವು ಅಭ್ಯರ್ಥಿಗಳ ವರ್ಗಾವಣೆ ಪ್ರಮಾಣಪತ್ರದಲ್ಲಿ ಜಾತಿ ಕಾಲಂನಲ್ಲಿ ಮುಸ್ಲಿಂ ಎಂದು ಹಾಗೂ ಉಪಜಾತಿ ಕಾಲಂನಲ್ಲಿ ನದಾಫ್/ಪಿಂಜಾರ ಎಂದು ನಮೂದಿಸದಿರುವ ಕಾರಣದಿಂದ ಪ್ರಮಾಣಪತ್ರ ಪಡೆಯಲು ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಲಾಗಿದೆ.
ಇಂತಹ ಪ್ರಕರಣಗಳಲ್ಲಿ ಕೇವಲ ದಾಖಲೆಯಲ್ಲಿನ ನಮೂದಿನ ಆಧಾರದ ಮೇಲೆ ಅರ್ಜಿಗಳನ್ನು ತಿರಸ್ಕರಿಸದೆ, ಅಭ್ಯರ್ಥಿಗಳ ಕುಟುಂಬದ ವಂಶಾವಳಿ ಹಾಗೂ ಜಾತಿಗೆ ಸಂಬಂಧಿಸಿದ ಸ್ಥಳೀಯ ದಾಖಲೆಗಳನ್ನು ಪರಿಶೀಲಿಸಿ ವಾಸ್ತವಾಂಶವನ್ನು ದೃಢಪಡಿಸಿಕೊಂಡು ಜಾತಿ ಮತ್ತು ಆದಾಯ ಪ್ರಮಾಣಪತ್ರ ವಿತರಿಸುವಂತೆ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಂಘ ಮನವಿ ಮಾಡಿದೆ.
ಅರ್ಹ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಪ್ರಮಾಣಪತ್ರ ದೊರೆಯುವಂತೆ ಆಡಳಿತಾತ್ಮಕ ಕ್ರಮ ಕೈಗೊಂಡು, ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ಅನಗತ್ಯ ತೊಂದರೆಗಳನ್ನು ನಿವಾರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ತಾಲೂಕು ಅಧ್ಯಕ್ಷ ಫತ್ರುಸಾಬ ನದಾಫ್, ಮೈನೋದ್ದಿನ ನದಾಫ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.






