Kalaburagi | ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿ ಮುಖಂಡರ ಬಂಧನ ವಿರೋಧಿಸಿ ಡಿವೈಎಫ್ಐ–ಎಸ್ಎಫ್ಐ ಪ್ರತಿಭಟನೆ

ಕಲಬುರಗಿ: ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡರ ಬಂಧನವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾಗೂ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ತೀವ್ರವಾಗಿ ಖಂಡಿಸಿವೆ.
ನಗರದ ಎಸ್ವಿಪಿ ವೃತ್ತದಲ್ಲಿ ಜಮಾಯಿಸಿದ ಎರಡು ಸಂಘಟನೆಗಳ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್, ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾದ ನೀಟ್-ಯುಜಿ ಪರೀಕ್ಷೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ನಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಗೆ ಸಿಲುಕಿದೆ ಎಂದು ಆರೋಪಿಸಿದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರೀಕ್ಷೆಗಳ ನಿರ್ವಹಣೆಯಲ್ಲಿ ಪದೇ ಪದೇ ವಿಫಲವಾಗುತ್ತಿದ್ದು, ಈ ಹಿಂದೆ ಕೂಡ ಹಲವು ಅಕ್ರಮಗಳು ಹಾಗೂ ಅವ್ಯವಸ್ಥೆಗಳು ವರದಿಯಾಗಿವೆ. ಇಂತಹ ಅಸಮರ್ಥ ವ್ಯವಸ್ಥೆಯನ್ನು ಮುಂದುವರಿಸುವ ಬದಲು ಪಾರದರ್ಶಕ, ಜವಾಬ್ದಾರಿಯುತ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಹಕ್ಕುಗಳು ಹಾಗೂ ಭವಿಷ್ಯದ ರಕ್ಷಣೆಗೆ ಹೋರಾಟ ನಡೆಸುತ್ತಿದ್ದ ಎಸ್ಎಫ್ಐ ಮತ್ತು ಇತರ ವಿದ್ಯಾರ್ಥಿ ಸಂಘಟನೆಗಳ ಮುಖಂಡರನ್ನು ಅಪರಾಧಿಗಳಂತೆ ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರಾದ ಪ್ರಮೋದ್ ಪಾಂಚಾಳ್, ಸಲ್ಮಾನ್ ಖಾನ್, ಪ್ರೇಮ್, ಪ್ರದೀಪ್, ಎಸ್ಎಫ್ಐ ಜಿಲ್ಲಾ ಸಮಿತಿ ಸದಸ್ಯರಾದ ಅಕ್ಷರಾ, ಅನಿತಾ, ಸುಧಾರಾಣಿ, ಶಾಂತಮ್ಮ, ರಾಧಿಕಾ ಸೇರಿದಂತೆ ಹಲವರು ಭಾಗವಹಿಸಿದ್ದರು.






