Kalaburagi | ಕೌಟುಂಬಿಕ ಕಲಹ : ಮಗುವಿನೊಂದಿಗೆ ಗರ್ಭಿಣಿ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆ ಗರ್ಭಿಣಿ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಅಂಬಿಕಾ ವೀರಭದ್ರಪ್ಪ (25) ಹಾಗೂ ಅವರ ಮಗುವನ್ನು ಆರಾಧ್ಯ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಅಂಬಿಕಾ ಅವರು ಮೂರು ವರ್ಷಗಳ ಹಿಂದೆ ಚಿಂಚನಸೂರು ಗ್ರಾಮದ ವೀರಭದ್ರ ಅವರೊಂದಿಗೆ ವಿವಾಹವಾಗಿದ್ದರು. ಮದುವೆಯಾದ ನಂತರ ದಂಪತಿಗಳ ನಡುವೆ ಹೊಂದಾಣಿಕೆ ಕೊರತೆಯಿಂದಾಗಿ ಆಗಾಗ ಕೌಟುಂಬಿಕ ಕಲಹಗಳು ನಡೆಯುತ್ತಿದ್ದು, ಇದರಿಂದ ಅಂಬಿಕಾ ಮನನೊಂದಿದ್ದರು ಎನ್ನಲಾಗಿದೆ.
ಗುರುವಾರ ಬೆಳಗ್ಗೆ ಅಂಬಿಕಾ ಮನೆಯಿಂದ ಹೊರಟು ಗ್ರಾಮದ ಬಾವಿಯತ್ತ ತೆರಳಿದ್ದಾರೆ. ಬಾವಿ ಬಳಿ ತಮ್ಮ ಚಪ್ಪಲಿಗಳನ್ನು ಬಿಟ್ಟು, ಮಗುವನ್ನು ಬೆನ್ನಿಗೆ ಕಟ್ಟಿಕೊಂಡೇ ಬಾವಿಗೆ ಹಾರಿರುವುದು ನಂತರ ಬೆಳಕಿಗೆ ಬಂದಿದೆ.
ಬೆಳಗ್ಗೆಯಿಂದ ಅಂಬಿಕಾ ಕಾಣಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾವಿ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದು, ಅನುಮಾನಗೊಂಡ ಸ್ಥಳೀಯರು ಬಾವಿಯಲ್ಲಿ ಶೋಧ ನಡೆಸಿದಾಗ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.
ಘಟನೆಯ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






