ಕಲಬುರಗಿ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರಿಂದ ಪ್ರತಿಭಟನೆ

ಸೇಡಂ: ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಹಾಗೂ ಟಾಟಾ ಪವರ್ ಕಂಪೆನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಭಾರತೀಯ ಕಿಸಾನ್ ಸಂಘದ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು, ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ರೈತರಿಗೆ ನೀಡಲಾಗುತ್ತಿರುವ ವಿದ್ಯುತ್ ಸೇವೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ವಿಶೇಷವಾಗಿ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದ್ದು, ರೈತರ ಹಿತಾಸಕ್ತಿಗೆ ಧಕ್ಕೆ ಉಂಟಾಗಬಹುದು ಎಂದು ಹೇಳಿದರು.
ಇದೇ ವೇಳೆ 2025-26ನೇ ಸಾಲಿನಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ತಾಲೂಕು ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳು ವ್ಯಾಪಕ ಹಾನಿಗೊಳಗಾಗಿವೆ. ಆದರೆ ಸರಕಾರ ಇನ್ನೂ ಎರಡು ಕಂತಿನ ಬೆಳೆ ವಿಮೆ ಪರಿಹಾರ ಹಣವನ್ನು ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ವಿಮೆ ಹಣ ಬಿಡುಗಡೆ ಮಾಡಿ ನೆರವಾಗಬೇಕು ಎಂದು ಒತ್ತಾಯಿಸಿದರು.
ರೈತರು ದೇಶದ ಬೆನ್ನೆಲುಬು ಎಂಬ ಮಾತು ಕೇವಲ ಭಾಷಣಗಳಿಗೆ ಸೀಮಿತವಾಗದೆ, ಸರಕಾರವು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಂತಕುಮಾರ್ ಚನ್ನಕಿ, ಗಂಗಾಧರ ಜಾಧವ್, ಆಮಶೆಟ್ಟಿ ಪಾಟೀಲ್ ಹೆಡ್ಡಳ್ಳಿ, ರವಿ ಪಾಟೀಲ್ ಸೂರವಾರ, ದೊಡ್ಡಪ್ಪಗೌಡ ರಾಮಪ್ಪ ಮದಕಲ್, ಯಡಗಾ, ಭೀಮರಾವ್ ಮಾಲಿ ಪಾಟೀಲ್ ಮಳಖೇಡ, ಮಲ್ಲಿಕಾರ್ಜುನ ಪೂಜಾರಿ, ಮಹೇಶ್ ರೇಮಗೊಂಡ, ಮಹೇಶ್ ಗುತ್ತೇದಾರ್, ಶರಣು ಕಾಳಗಿ, ಚಂದ್ರಕಾಂತ ಕಲ್ಕಮ್, ಕಾಶಿನಾಥ್ ಟೈಗರ್, ಅನೀಲ ಬೋಸರ, ಪರಶುರಾಮ ದೋಡ್ಮನಿ, ಪ್ರಭುರಾವ ಬೋಸಲೆ, ಬಾಲರಾಜ್ ಹೋಳ್ಕರ್ ಸೇರಿದಂತೆ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.






