ಕಲಬುರಗಿ | ರೈತರು ಆದಾಯದ ದ್ವಿಗುಣದತ್ತ ಹೆಚ್ಚು ಗಮನ ಕೊಡಿ: ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ರೈತ ಸಮುದಾಯವು ಕೃಷಿ ಉತ್ಪನ್ನಗಳ ಬೆಳೆಯುವುದರ ಜೊತೆಗೆ ಅವುಗಳನ್ನು ಸಂಸ್ಕರಿಸಿ ಮಾರಾಟ ಮಾಡುವ ಮೂಲಕ ತಮ್ಮ ಅದಾಯದ ದ್ವಿಗುಣದತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಕಲಬುರಗಿ ಹಾಗೂ ಕಪೆಕ್ ಸಂಸ್ಥೆಯವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಪಾಲುದಾರರಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಈ ಯೋಜನೆಯು ಅತಿ ಸಣ್ಣ ಆಹಾರ ಸಂಸ್ಕರಣೆ ಉದ್ದಿಮೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಗುಂಪು ಹಾಗೂ ಸಹಕಾರಿ ಸಂಘಗಳಿಗೆ ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ದೊರಕುವಲ್ಲಿ ಸಹಕಾರಿಯಾಗಿದ್ದು, ರೈತಾಪಿ ವರ್ಗ ಇದರ ಸದ್ಬಳಕೆ ಮಾಡಿಕೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಈ ಯೋಜನೆಯು ತುಂಬಾ ಫಲಪ್ರಧವಾಗಿದೆ ಎಂದರು.
ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ಮಾತನಾಡಿದರು.
ಬೆಂಗಳೂರಿನ ಕೆಪೆಕ್ ಸಂಸ್ಥೆಯ ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಇನಾಮದಾರ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಸಂಜಯ ರೆಡ್ಡಿ, ಲೀಡ್ ಬ್ಯಾಂಕ್ ಅಧಿಕಾರಿ ರವಿಗೌಡ ಹಾಗೂ ಜಿಲ್ಲೆಯ ಪ್ರಮುಖ ನೋಡಲ್ ಬ್ಯಾಂಕ್ಗಳ ಅಧಿಕಾರಿಗಳು, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು, ರೈತ ಉತ್ಪಾದಕ ಸಂಸ್ಥೆಯ ಸದಸ್ಯರು, ಸ್ವಸಹಾಯ ಸಂಘಗಳ ಗುಂಪಿನ ಸದಸ್ಯರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ 63 ಹೊಸ ಫಲಾನುಭವಿಗಳ ನೊಂದಣಿ ಮಾಡಲಾಯಿತು.







