ಕಲಬುರಗಿ: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ವಿವಿಧ ಹಾಸ್ಟೆಲ್ಗಳು ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಹಾಸ್ಟೆಲ್ ಹಾಗೂ ವಸತಿ ನಿಲಯಗಳ ಹೊರಗುತ್ತಿಗೆ ನೌಕರರು ಹಲವು ದಿನಗಳಿಂದ ಕನಿಷ್ಠ ವೇತನಕ್ಕಾಗಿ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿದಿಲ್ಲ ಎಂದು ಆರೋಪಿಸಿದರು.
ಬಿ.ಸಿ.ಎಂ. ಇಲಾಖೆಯ ಹಾಸ್ಟೆಲ್ಗಳ ನೌಕರರಿಗೆ ಇತ್ತೀಚಿನ ತಿಂಗಳ ವೇತನವನ್ನು ಕನಿಷ್ಠ ವೇತನದಂತೆ ಪಾವತಿಸಲಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೂಡ ಒಂದು ತಿಂಗಳ ವೇತನ ಜಾರಿಯಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಇಂದಿರಾಗಾಂಧಿ, ಏಕಲವ್ಯ ಸೇರಿದಂತೆ ಕ್ರೈಸ್ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ದೊರೆಯದೆ, ಮೂರು ತಿಂಗಳ ವೇತನ ಬಾಕಿ ಉಳಿದಿದೆ ಎಂದು ಸಂಘದ ಮುಖಂಡರು ದೂರಿದರು.
ಕಲಬುರಗಿ ನಗರದ ಖಜಾನೆಯಲ್ಲಿ ಹೊರಗುತ್ತಿಗೆ ನೌಕರರ ವೇತನ ಬಿಲ್ಗಳನ್ನು ಪಾವತಿಸಲು ವಿಳಂಬ ಮಾಡಲಾಗುತ್ತಿದ್ದು, ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಸ್ಟೆಲ್ ನೌಕರರಿಗೆ ವಾರಕ್ಕೊಂದು ರಜೆ ನೀಡಬೇಕು ಎಂಬ ಬೇಡಿಕೆಯನ್ನೂ ಈಡೇರಿಸಬೇಕು. ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಪರಿಶೀಲನೆ ನಡೆಸಬೇಕು. ನೌಕರರ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮುಹಮ್ಮದ್ ಝಮೀರುದ್ದೀನ್, ಅಲ್ಲಾ ಪಟೇಲ್, ನಾಗರತ್ನ ಮದನಕರ್, ಪರಶುರಾಮ, ಮೇಘರಾಜ ಕಟಾರೆ, ಬಾಬು ಹೊಸಮನಿ, ನರಸಮ್ಮ ಚಂದನಕೇರಾ, ಲಕ್ಷ್ಮೀಪುತ್ರ ಕಲ್ಯಾಣಿ, ನರಸಮ್ಮ ಕೋಡಂಪಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.






