ಕಲಬುರಗಿ | ಶೀಘ್ರದಲ್ಲಿ 3ನೇ ವಿಶ್ವ ಬಲಾಢ್ಯ ಆರ್ಥಿಕ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ : ಸಂಸದ ಜಗದೀಶ್ ಶೆಟ್ಟರ್

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಕಳೆದ 11 ವರ್ಷಗಳಿಂದ ಜನಪರವಾದ ಉತ್ತಮ ಆಡಳಿತ ನೀಡಿದ ಪರಿಣಾಮವಾಗಿ ಆರ್ಥಿಕ ಮಟ್ಟದಲ್ಲಿ ವಿಶ್ವದಲ್ಲಿ 10ನೇ ಸ್ಥಾನದಲ್ಲಿ ಗುರುತಿಸಿಕೊಳ್ಳುತ್ತಿದ್ದ ಭಾರತ ಈಗ, ಜಪಾನ್ ಹಿಂದಿಕ್ಕಿ, 4ನೇ ಸ್ಥಾನಕ್ಕೆ ಬಂದಿದೆ, ಶೀಘ್ರದಲ್ಲೇ 3ನೇ ಸ್ಥಾನಕ್ಕೂ ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2047ರವರೆಗೆ ವಿಕಸಿತ ಭಾರತದ ಸಂಕಲ್ಪ ದೃಷ್ಟಿಯಲ್ಲಿಟ್ಟುಕೊಂಡು ಭಾರತ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಇದಕ್ಕೆ ಪ್ರಧಾನಿ ಮೋದಿ ಅವರು ಅನೇಕ ಕಾರ್ಯಕ್ರಮಗಳನ್ನು ಹೊರತಂದಿದ್ದಾರೆ ಎಂದರು.
11 ವರ್ಷದ ಆಡಳಿತದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ, ಆಯುಷ್ಮಾನ ಭಾರತ, ಜಲಜೀವನ ಮಿಷನ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ಮುಟ್ಟಿಸಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಚಂದು ಪಾಟೀಲ್, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್, ಮಾಜಿ ಸಂಸದ ಉಮೇಶ್ ಜಾಧವ್, ಭಗವಂತ ಖೂಬಾ, ಶಾಸಕ ಬಸವರಾಜ ಮತ್ತಿಮಡು, ಸುಭಾಷ ಗುತ್ತೇದಾರ್, ಸೇರಿದಂತೆ ಮತ್ತಿತರರು ಇದ್ದರು.







