Kalaburagi | ಜೂ.21ರಂದು ವಿಶ್ವ ಯೋಗ ದಿನಾಚರಣೆ

ಕಲಬುರಗಿ: ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 21ರಂದು ಬೆಳಿಗ್ಗೆ 7ರಿಂದ 7.45ರವರೆಗೆ ಡಾ. ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಬೆಳಿಗ್ಗೆ 6.30ರೊಳಗೆ ಕ್ರೀಡಾಂಗಣ ತಲುಪಿ ನಿಗದಿತ ಸ್ಥಳಗಳಲ್ಲಿ ಸಿದ್ಧರಿರಬೇಕು ಎಂದು ಸೂಚಿಸಿದರು.
ಕಾರ್ಯಕ್ರಮಕ್ಕೆ ಅಗತ್ಯವಿರುವ ಯೋಗ ಮ್ಯಾಟ್ಗಳು, ಶುದ್ಧ ಕುಡಿಯುವ ನೀರು, ತುರ್ತು ಚಿಕಿತ್ಸೆಗೆ ಆಂಬುಲೆನ್ಸ್, ಪೊಲೀಸ್ ಭದ್ರತೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕ್ರೀಡಾಂಗಣದ ಸ್ವಚ್ಛತೆ ಮತ್ತು ಸೌಂದರ್ಯೀಕರಣಕ್ಕಾಗಿ ಮಹಾನಗರ ಪಾಲಿಕೆ, ಕ್ರೀಡಾ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜೂನ್ 14ರಂದು ಆನ್ಲೈನ್ ಮೂಲಕ ನಡೆಯಲಿರುವ ಯೋಗದ ಗಿನ್ನೆಸ್ ವಿಶ್ವ ದಾಖಲೆ ಪ್ರಯತ್ನದಲ್ಲಿ ಜಿಲ್ಲೆಯ ಗರಿಷ್ಠ ಸಂಖ್ಯೆಯ ಜನರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಯಪ್ಪ ಹುಣಸಗಿ ತಿಳಿಸಿದರು.
ವೆಬ್ ಪೋರ್ಟಲ್ ಲಿಂಕ್ ಅನ್ನು ಎಲ್ಲಾ ಇಲಾಖೆಗಳ ಅಧಿಕೃತ ಗುಂಪುಗಳಲ್ಲಿ ಹಂಚಿಕೊಳ್ಳಬೇಕು. ವಿಶೇಷವಾಗಿ ಶಾಲಾ ಶಿಕ್ಷಣ, ಸಮಾಜ ಕಲ್ಯಾಣ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು, ಯೋಗಾಭ್ಯಾಸದ ಛಾಯಾಚಿತ್ರಗಳನ್ನು ಪೋರ್ಟಲ್ಗೆ ಅಪ್ಲೋಡ್ ಮಾಡಬೇಕು ಎಂದು ಸೂಚಿಸಿದರು.
ಜೂನ್ 19ರಂದು ‘ಯೋಗ ನಡಿಗೆ’ :
ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 19ರಂದು ಬೆಳಿಗ್ಗೆ 9.30ಕ್ಕೆ ನಗರದ ಪ್ರಮುಖ ರಸ್ತೆಗಳಲ್ಲಿ ‘ಯೋಗ ನಡಿಗೆ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ನಡಿಗೆಯು ಜಗತ್ ವೃತ್ತದಿಂದ ಆರಂಭವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಾಗಲಿದೆ.
ಜಿಲ್ಲೆಯ ಸಾರ್ವಜನಿಕರು, ಯೋಗಾಸಕ್ತರು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಖರ್ ಮೋಘ, ಜಿಲ್ಲಾ ಯೋಜನಾ ನಿರ್ದೇಶಕ ಮುನ್ನವರ ದೌಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಕೆ.ಬಿ. ಬಬಲಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಯೋಗ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.






