Kalaburagi | ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ನಿಗಾ ವಹಿಸಿ : ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯಾದ್ಯಂತ ಬಿತ್ತನೆ ಚಟುವಟಿಕೆಗಳು ಗರಿಗೆದರಲಿರುವ ಹಿನ್ನೆಲೆಯಲ್ಲಿ ಕೃಷಿ ಸೇರಿದಂತೆ ಸಂಬಂಧಿತ ಎಲ್ಲಾ ಇಲಾಖೆಗಳು ಪೂರ್ವಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಸುರಿದ ಮಳೆಯಿಂದ ತೋಟಗಾರಿಕೆ ಇಲಾಖೆಯಿಂದ 45 ಹೆಕ್ಟೇರ್ ಬೆಳೆ ಹಾನಿ ವರದಿ ಸಲ್ಲಿಕೆಯಾಗಿದ್ದು, ಕೃಷಿ ಇಲಾಖೆಯು ಕೂಡ ತಕ್ಷಣ ಸರ್ವೆ ನಡೆಸಿ ವರದಿ ಸಲ್ಲಿಸಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 11,634 ಮೆಟ್ರಿಕ್ ಟನ್ ಯೂರಿಯಾ, 9,583 ಮೆಟ್ರಿಕ್ ಟನ್ ಡಿಎಪಿ, 13,990 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ಸೇರಿದಂತೆ ಒಟ್ಟು 38,351 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಇದರಲ್ಲಿ ಈಗಾಗಲೇ 5ರಿಂದ 6 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಇನ್ನೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ತುರ್ತು ಬಿತ್ತನೆಗೆ ಮುಂದಾಗಬಾರದು ಎಂದು ಕೃಷಿ ಇಲಾಖೆ ಹಾಗೂ ತಹಶೀಲ್ದಾರರು ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ 153 ಗ್ರಾಮಗಳನ್ನು ಗುರುತಿಸಲಾಗಿದೆ. ಮಹಾರಾಷ್ಟ್ರದ ಡ್ಯಾಂಗಳಿಂದ ನೀರು ಬಿಡುಗಡೆ ಮಾಡುವ ಮುನ್ನ ಮಾಹಿತಿ ಪಡೆದು ನದಿ ತೀರದ ಗ್ರಾಮಸ್ಥರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಬೇಕು. ಡಂಗೂರ ಸಾರುವ ಮೂಲಕ ಜನರಿಗೆ ಮಾಹಿತಿ ತಲುಪಿಸಬೇಕು. ಸಿಡಿಲು ಹಾಗೂ ಪ್ರವಾಹದಿಂದ ಮಾನವ ಮತ್ತು ಪ್ರಾಣಿ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಿಥಿಲಾವಸ್ಥೆಯಲ್ಲಿರುವ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯ ಕಟ್ಟಡಗಳನ್ನು ತಕ್ಷಣ ಗುರುತಿಸಿ ಸ್ಥಳಾಂತರಿಸುವಂತೆ ಸೂಚನೆ ನೀಡಿದ ಅವರು, ಮಳೆಯಿಂದ ಬೆಳೆ, ರಸ್ತೆ, ಸೇತುವೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾದರೆ 24 ಗಂಟೆಯೊಳಗೆ ಮಾಹಿತಿ ಸಲ್ಲಿಸಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
ಮಳೆ ಮತ್ತು ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತವಾಗುವ ಪ್ರದೇಶಗಳಿಗೆ ಈಗಲೇ ಪರ್ಯಾಯ ಮಾರ್ಗಗಳನ್ನು ಗುರುತಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ತಾಲೂಕು ಮಟ್ಟದಲ್ಲಿ 24x7 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿ ಸಿಬ್ಬಂದಿ ನಿಯೋಜಿಸುವಂತೆ ಆದೇಶಿಸಿದರು.
ಮಳೆಗಾಲದಲ್ಲಿ ಹಾವು ಕಚ್ಚುವ ಪ್ರಕರಣಗಳು ಹೆಚ್ಚಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಅಗತ್ಯ ಪ್ರಮಾಣದ ಎಂಟಿ ವೇನಮ್ ಡೋಸ್ ದಾಸ್ತಾನು ಇರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಯಿತು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ಹಾಗೂ ನಾಲೆಗಳ ಹೂಳೆತ್ತುವ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸಂಪೂರ್ಣ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ರಾಜುಲ್ ಸಂಕನೂರ್ ಮಾತನಾಡಿ, ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಜನರನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರಗಳನ್ನು ಈಗಲೇ ಗುರುತಿಸಬೇಕು. ಮಳೆಯ ನಡುವೆಯೂ ಶುದ್ಧ ಕುಡಿಯುವ ನೀರಿನ ಪೂರೈಕೆ ನಿರಂತರವಾಗಿರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಡಿ.ಸಿ.ಪಿ. ಶಾಲೂ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ.ಮಹೇಶ ಮೇಘಣ್ಣನವರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು ಭಾಗವಹಿಸಿದ್ದರು.






