ಕಲಬುರಗಿ | ಕೋಲಿ, ಕಬ್ಬಲಿಗ ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸಿಗೆ ಸಿದ್ಧತೆ: ತಿಪ್ಪಣ್ಣಪ್ಪ ಕಮಕನೂರ್

ಕಲಬುರಗಿ: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಬಾರ್ಕಿ ಮತ್ತು ಮೊಗವೀರ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರಕಾರ ಸಿದ್ದತೆ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಹೇಳಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಿಪ್ಪಣ್ಣಪ್ಪ ಕಮಕನೂರ್, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯವನ್ನು ಬಿಲಿಷ್ಠಗೊಳಿಸಲು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ರಾಜ್ಯದಲ್ಲಿರುವ ಎಲ್ಲಾ ಹಿಂದುಳಿದ ವರ್ಗಗಳ ಆಯೋಗಗಳು ಶಿಫಾರಸ್ಸು ಮಾಡಿವೆ. ಕಳೆದ 30 ವರ್ಷಗಳ ಕಾಲದ ಹೋರಾಟಕ್ಕೆ ಪ್ರತಿಫಲ ಸಿಗುವ ಸಮಯವ ಬಂದಿದೆ. ಇಂತಹ ಸಂದರ್ಭದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸುವುದು ಸರಿಯಲ್ಲ ಎಂದು ತಿಳಿಸಿದರು.
ಎಸ್ಟಿ ಶಿಫಾರಸ್ಸಿಗೆ ಕೇಂದ್ರಕ್ಕೆ ಸಲ್ಲಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಂಬಂಧಪಟ್ಟ ಹಲವು ಸಚಿವರಿಗೆ ಈಗಾಗಲೇ ಭೇಟಿ ಮಾಡಿ ಮನವರಿಕೆ ಮಾಡಿದ್ದೇವೆ. ಅದಕ್ಕೆ ಎಲ್ಲರೂ ಧನಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಸರಕಾರಕ್ಕೆ ಬೆಳಗಾವಿ ಅಧಿವೇಶನದವರೆಗೆ ಕಾಲಾವಕಾಶ ನೀಡಬೇಕು. ಒಂದು ವೇಳೆ ಸರಕಾರ ಇದರಲ್ಲಿ ವಿಳಂಬ ನೀತಿ ಅನುಸರಿಸಿದರೆ ತೀವ್ರ ಸ್ವರೂಪದ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಾಜಗೋಪಾಲರೆಡ್ಡಿ, ಶರಣಪ್ಪ ನಾಟೀಕರ್, ಸೈಬಣಪ್ಪ, ಅವ್ವಣ್ಣ ಮ್ಯಾಕೇರಿ, ರಮೇಶ್ ನಾಟೀಕರ್, ಸೋಮನಾಥ್, ಬಸವರಾಜ್ ಬೂದಿಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.







