ಕಲಬುರಗಿ | ಅ.2 ರಂದು ಗಾಂಧಿ ಜಯಂತಿ ನಿಮಿತ್ತ ಸೆ.30 ರಂದು ಜಿಲ್ಲೆಯಾದ್ಯಂತ ಶ್ರಮದಾನ ಆಯೋಜನೆಗೆ ಸೂಚನೆ

ಕಲಬುರಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸರ್ವಧರ್ಮ ಪ್ರಾರ್ಥನೆ, ಸದ್ಭಾವನಾ ಗೀತ ಗಾಯನ ಹಾಗೂ ಗಾಂಧಿಪ್ರಿಯ ಭಜನ್ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಅ.2ರಂದು ಕಲಬುರಗಿ ನಗರದ ಸರ್ದಾರ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿರುವ ಕನ್ನಡ ಭವನದಲ್ಲಿ ಬಾಪುವಿನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ವಿವಿಧ ಧರ್ಮಗುರುಗಳು ಭಾಗವಹಿಸಲಿದ್ದಾರೆ.
ಕನ್ನಡ ಭವನ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರು, ನಿರಂತರ ವಿದ್ಯುತ್ ಪೂರೈಕೆ ಮತ್ತು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗಾಂಧೀಜಿ ಅವರ ಸರಳ ಜೀವನವನ್ನು ವಿವರಿಸುವ ಉಪನ್ಯಾಸ ಕಾರ್ಯಕ್ರಮವೂ ಜರುಗಲಿದೆ. ಇದೇ ಸಂದರ್ಭದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ವಿತರಿಸಲಾಗುವುದು.
ಸೆ.30ರಂದು ಶ್ರಮದಾನ:
ಗಾಂಧಿ ಜಯಂತಿ ಅಂಗವಾಗಿ ಸೆ.30 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯ ಶ್ರಮದಾನ ಮತ್ತು ಅ.2 ರಂದು ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ತಿಳಿಸಿದರು.
ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ದಗಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ, ಪಿಯು ಶಿಕ್ಷಣ ಇಲಾಖೆಯ ಸುರೇಶ ಅಕ್ಕಣ್ಣ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.







