Kalaburagi | ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಬಡವರಿಗೂ ತಲುಪಿಸುವುದು ನಮ್ಮ ಗುರಿ: ರಾಮಪ್ಪ ಎಂ.

ಕಲಬುರಗಿ: ಸಮಾಜದ ಕಟ್ಟಕಡೆಯ ಬಡವರಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಡೆದ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಿಗಮದ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು 30 ದಿನಗಳೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಸೌಲಭ್ಯ ಪಡೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿ ನಿಗಮಕ್ಕೆ 75 ಕೋಟಿ ರೂ. ಬಜೆಟ್ ನಿಗದಿಯಾಗಿದ್ದು, ವಿಕಾಸ ಯೋಜನೆ (ವಿಡಿಪಿ) ಸೇರಿದಂತೆ ಒಟ್ಟು ಅನುದಾನ ಸುಮಾರು 100 ಕೋಟಿ ರೂ. ತಲುಪುವ ನಿರೀಕ್ಷೆಯಿದೆ ಎಂದು ಹೇಳಿದರು.
13 ಗ್ಯಾರಂಟಿಗಳಿಂದ ಸಮುದಾಯಕ್ಕೆ ಲಾಭ :
ನಿಗಮದ 8 ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ 5 ಪಂಚ ಗ್ಯಾರಂಟಿ ಯೋಜನೆಗಳು ಸೇರಿ ಒಟ್ಟು 13 ಸೌಲಭ್ಯಗಳು ಸಮುದಾಯಕ್ಕೆ ದೊರೆಯುತ್ತಿವೆ. ನಿಗಮವು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಹಲವು ಯೋಜನೆಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಭೋವಿ ಹಾಗೂ ವಡ್ಡರ ಸಮುದಾಯಗಳು ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಗಮನಿಸಿ, ಈ ಭಾಗಕ್ಕೆ ಹೆಚ್ಚಿನ ಅನುದಾನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಮಟ್ಟದಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, 30 ದಿನಗಳೊಳಗೆ ಶಾಸಕರ ಆಯ್ಕೆ ಪಟ್ಟಿಯನ್ನು ನಿಗಮದ ಮುಖ್ಯ ಕಚೇರಿಗೆ ಸಲ್ಲಿಸಬೇಕು ಹಾಗೂ ಬಾಕಿ ಅರ್ಜಿಗಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಶಿಕ್ಷಣ ಮತ್ತು ಸಬಲೀಕರಣಕ್ಕೆ ಒತ್ತು :
ಬಡತನ ನಿವಾರಣೆಗೆ ಶಿಕ್ಷಣವೇ ಪ್ರಮುಖ ಮಾರ್ಗವಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ಸೇರಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಾಸ್ಟೆಲ್ ಸೌಲಭ್ಯಗಳ ವಿಸ್ತರಣೆ, ಮಹಿಳಾ ಸಂಘಗಳ ಸಬಲೀಕರಣ ಹಾಗೂ ಅಲೆಮಾರಿ ಸಮುದಾಯಗಳ ಗುರುತಿಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ನಕಲಿ ಜಾತಿ ಪ್ರಮಾಣಪತ್ರಕ್ಕೆ ಕಡಿವಾಣ :
ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಅನರ್ಹರು ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳನ್ನು ತಡೆಯಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಜಾತಿ ಪ್ರಮಾಣಪತ್ರ ನೀಡುವ ಮೊದಲು ಶಾಲಾ ದಾಖಲಾತಿಗಳ ಸಮಗ್ರ ಪರಿಶೀಲನೆ ಕಡ್ಡಾಯಗೊಳಿಸಲಾಗುವುದು ಎಂದು ರಾಮಪ್ಪ ಎಂ. ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ನಿಗಮದ ವ್ಯವಸ್ಥಾಪಕ ಮರಲಿಂಗ್ ಹೊನ್ನೆಗುಂಟಿಕರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.






