Kalaburagi | ವ್ಯಕ್ತಿತ್ವ ವಿಕಸನವೇ ಶಿಕ್ಷಣದ ನಿಜವಾದ ಉದ್ದೇಶ: ನರೇಂದ್ರ ಬಡಶೇಷಿ

ಕಲಬುರಗಿ: ನಗರದ ದೊಡ್ಡಪ್ಪ ಅಪ್ಪ ವಸತಿ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಗಳು ಹಾಗೂ ಪಾಲಕರಿಗಾಗಿ ಶಿಕ್ಷಣ ವ್ಯವಸ್ಥೆಯ ಪರಿಚಯಾತ್ಮಕ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಎಸ್ಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನರೇಂದ್ರ ಬಡಶೇಷಿ ಮಾತನಾಡಿ, ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವ ಸಾಧನವಲ್ಲ, ವ್ಯಕ್ತಿತ್ವ ವಿಕಸನಗೊಳಿಸುವ ಶಕ್ತಿಯಾಗಿದೆ ಎಂದು ಹೇಳಿದರು. ತಾಯಿ ಮಗುವಿಗೆ ತನ್ನ ಭಾಷೆಯ ಮೂಲಕ ಸಂಸ್ಕಾರವನ್ನು ನೀಡುವುದರಿಂದಲೇ ಅದನ್ನು ಮಾತೃಭಾಷೆ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕಂಠಪಾಠಕ್ಕಿಂತ ವಿಷಯವನ್ನು ಅರ್ಥಮಾಡಿಕೊಂಡು ಕಲಿಯಬೇಕು. ಪ್ರಥಮ ಚಿಕಿತ್ಸೆಯ ತರಬೇತಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಗತ್ಯವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೈಕ್ಷಣಿಕ ಅವಕಾಶಗಳು ರಾಜ್ಯದ ಅನೇಕ ಭಾಗಗಳಿಗಿಂತ ಹೆಚ್ಚಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಟೀಚರ್ ಮತ್ತು ಗುರುವಿನ ನಡುವಿನ ವ್ಯತ್ಯಾಸವನ್ನು ವಿವರಿಸಿದ ಅವರು, “ಟೀಚರ್ ಪಾಠ ಹೇಳುತ್ತಾರೆ; ಗುರು ವಿದ್ಯಾರ್ಥಿಯೊಳಗಿನ ಸಾಮರ್ಥ್ಯವನ್ನು ಹೊರತರುವ ಮಾರ್ಗದರ್ಶಿಯಾಗಿರುತ್ತಾರೆ” ಎಂದು ಹೇಳಿದರು. ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ದೇಶದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಎತ್ತಿಹಿಡಿಯುವ ಗುರಿಯನ್ನು ಹೊಂದಬೇಕು ಎಂದು ಕರೆ ನೀಡಿದರು.
ಮನೋವೈದ್ಯೆ ಡಾ. ಮೋನಿಕಾ ಕುಲ್ಸುರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್, ಸಿಗರೇಟ್ ಹಾಗೂ ಮದ್ಯದಂತಹ ದುಶ್ಚಟಗಳಿಂದ ದೂರವಿರಬೇಕು. ಸದ್ಗುಣ, ಶಿಸ್ತು, ಉತ್ತಮ ಆಹಾರ-ವಿಹಾರ ಹಾಗೂ ಸಮರ್ಪಕ ನಿದ್ರೆ ಯಶಸ್ಸಿನ ಪ್ರಮುಖ ಅಂಶಗಳಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಾಮಕೃಷ್ಣ ರೆಡ್ಡಿ ಮಾತನಾಡಿ, ಪಿಯುಸಿ ಹಂತವೇ ವಿದ್ಯಾರ್ಥಿಗಳ ಭವಿಷ್ಯದ ವೃತ್ತಿ ಆಯ್ಕೆಗೆ ಮಹತ್ವದ ಘಟ್ಟವಾಗಿದೆ. ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಮಾತ್ರವಲ್ಲದೆ ಇಂದಿನ ದಿನಗಳಲ್ಲಿ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳಿದ್ದು, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ಗುರಿ ನಿಗದಿಪಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ವಿನೋದ್ ಕುಮಾರ್ ಎಲ್. ಪತಂಗೆ ಕಾಲೇಜಿನ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಪರಿಚಯಾತ್ಮಕ ಮಾಹಿತಿ ನೀಡಿದರು. ಪಾಲಕರು ವಿದ್ಯಾರ್ಥಿಗಳ ಕಲಿಕೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಡಾ. ಆನಂದ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಬೋರೋಟಿ ಸ್ವಾಗತಿಸಿದರು. ವಂದನಾರ್ಪಣೆ ನೆರವೇರಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






