Kalaburagi | ಜಗಜೀವನ ರಾಮ್, ಡಾ.ಅಂಬೇಡ್ಕರ್ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ಸಿದ್ಧತೆ : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ : ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಮತ್ತು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಜಿಲ್ಲೆಯಾದ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹನೀಯರ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಸೌಹಾರ್ದಯುತವಾಗಿ ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಮುಖ್ಯ ಉದ್ದೇಶವಾಗಿರಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್ ಹಾಲ್) ನಲ್ಲಿ ಇರುವ ಬಾಬು ಜಗಜೀವನರಾಂ ಹಾಗೂ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಬೆಳಗ್ಗೆ 8.30 ಗಂಟೆಗೆ ಮಾಲಾರ್ಪಣೆ ಸಲ್ಲಿಸಲಾಗುತ್ತದೆ. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಶಿಸ್ತುಬದ್ಧ ಮೆರವಣಿಗೆ ಆಯೋಜಿಸಲು ನಿರ್ಧರಿಸಲಾಗಿದೆ.
ಜಯಂತಿ ಅಂಗವಾಗಿ ಪ್ರಮುಖ ವೃತ್ತಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರತಿಮೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿ, ವಿದ್ಯುತ್ ದೀಪಾಲಂಕಾರ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮಗಳನ್ನು ಆಯೋಜಿಸಿ ಗಣ್ಯರನ್ನು ಆಹ್ವಾನಿಸಬೇಕೆಂದು ತಿಳಿಸಲಾಗಿದೆ.
ಜಯಂತಿ ಕೇವಲ ಮೆರವಣಿಗೆಗೆ ಸೀಮಿತವಾಗದೇ, ಯುವಜನತೆಗೆ ಮಹನೀಯರ ಆದರ್ಶಗಳು, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಕೃಷಿ–ಆಡಳಿತ ಸುಧಾರಣೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರಿಗೆ ಸಮುದಾಯ ಭವನಗಳ ದುರಸ್ತಿ, ಸುಣ್ಣ-ಬಣ್ಣ ಹಾಗೂ ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲು ನಿರ್ದೇಶನ ನೀಡಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಬೆಳಗ್ಗೆ 9 ಗಂಟೆಗೆ ಜಯಂತಿ ಆಚರಿಸಲು ಹಾಗೂ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚಿಸಲಾಗಿದೆ.
ಮೆರವಣಿಗೆ ವೇಳೆ ಆಸ್ಪತ್ರೆಗಳ ಬಳಿ ಧ್ವನಿವರ್ಧಕಗಳ ಶಬ್ದ ಕಡಿಮೆ ಮಾಡುವುದು, ಅಂಬುಲೆನ್ಸ್ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಮತ್ತು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಂಚಾರ ವ್ಯವಸ್ಥೆ ಸುಗಮವಾಗಿರಲು ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಮುದಾಯ ಮುಖಂಡರು, ಈ ಜಯಂತಿಗಳು ಎಲ್ಲಾ ವರ್ಗದ ಜನರು ಒಗ್ಗೂಡಿ ಆಚರಿಸುವಂತಾಗಬೇಕು ಎಂದು ಮನವಿ ಮಾಡಿದರು. ವಿವಿಧ ಬಡಾವಣೆಗಳಿಂದ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೆ ಸಾಗಲಿದ್ದು, ಕಲಾ ತಂಡಗಳ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಇನ್ನಷ್ಟು ವೈಭವಶಾಲಿಯಾಗಲಿದೆ.
ಸಭೆಯಲ್ಲಿ ಡಿಸಿಪಿ ಪ್ರವೀಣ ನಾಯಕ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಡಿ.ಎಚ್.ಒ. ಡಾ. ಶರಣಬಸಪ್ಪ ಕ್ಯಾತನಾಳ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.






