ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿಗೆ ಪ್ರಗತಿಪರ ಸಂಘಟನೆಗಳಿಂದ ಕರೆ

ಜೇವರ್ಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮತದಾರರ ಹಕ್ಕುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಕರೆ ನೀಡಿದ್ದಾರೆ.
ಈ ಕುರಿತು ಜೇವರ್ಗಿಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸಭೆಯಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ಸಾರ್ವಜನಿಕ ಜಾಗೃತಿ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಮುಖಂಡರು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು. ಮನೆ ಮನೆ ಭೇಟಿ ನೀಡುವ ಸಮೀಕ್ಷಾ ಸಿಬ್ಬಂದಿಗೆ ಸರಿಯಾದ ಮಾಹಿತಿಯನ್ನು ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ನೋಡಿಕೊಳ್ಳುವಂತೆ ಹಾಗೂ ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ಅಂತ್ಯದಲ್ಲಿ ಮಾತನಾಡಿದ ಮುಖಂಡರು, ಮತದಾನ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲೂ ಇದೆ ಎಂದು ಮನವಿ ಮಾಡಿದರು.
ಸಭೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಥೋಡ್, ರೈತ ಮುಖಂಡ ಬಾಬು ಪಾಟೀಲ್, ರೈತ ಹೋರಾಟ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಪಟೇಲ್ ಯಾಳವಾರ, ರಾಜ ಪಟೇಲ್, ದಲಿತ ಮುಖಂಡರಾದ ಮಲ್ಲಣ್ಣ ಕೊಡಚಿ, ಪುಂಡಲಿಕ ಗಾಯಕ್ವಾಡ, ಶ್ರೀಹರಿ ಕರಕಿಹಳ್ಳಿ, ರವಿ ಕುಳಗೇರಿ, ಮಹಮ್ಮದ್ ಕೊಡಚಿ, ಟಿಪ್ಪು ಸುಲ್ತಾನ್ ತಾಲೂಕು ಸಮಿತಿಯ ಅಧ್ಯಕ್ಷ ಮೊಯನುದ್ದೀನ್ ಇನಾಮ್ದಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.






