Kalaburagi | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣದ ಖಾಸಗೀಕರಣ ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಗತ್ ಸರ್ಕಲ್ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಎಲ್ಲ ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನೀಟ್ ಪರೀಕ್ಷೆಯ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿರುವ ಕ್ರಮವನ್ನು ರದ್ದುಗೊಳಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಶಿಕ್ಷಣದ ಖಾಸಗೀಕರಣವನ್ನು ನಿಲ್ಲಿಸಿ, ಶಿಕ್ಷಣವನ್ನು ಪ್ರತಿಯೊಬ್ಬರಿಗೂ ಉಚಿತವಾಗಿ ಹಾಗೂ ಸಮಾನವಾಗಿ ದೊರೆಯುವ ಮೂಲಭೂತ ಹಕ್ಕಾಗಿ ಸರ್ಕಾರ ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡಿರುವ 22 ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ ಹಾಗೂ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಂಸತ್ ಚಲೋ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಹಾಗೂ ಹಿಂಸಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪೊಲೀಸರ ಹೆಸರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಮುಸುಕುಧಾರಿ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷಿಸಬೇಕು. ಪ್ರತಿಭಟನೆ ನಡೆದ ಸ್ಥಳಕ್ಕೆ ತರಲಾಗಿದ್ದ ಕಲ್ಲುಗಳ ಟಿಪ್ಪರ್ ಕುರಿತು ಸಹ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಚಿಂತಕರಾದ ಆರ್.ಕೆ. ಹುಡುಗಿ, ಮೀನಾಕ್ಷಿ ಬಾಳಿ, ಕೆ. ನೀಲಾ, ಮಹೇಶ್ ಎಸ್.ಬಿ., ಆರ್.ಜಿ. ಶೆಟಕಾರ, ಎಸ್.ಎಂ. ಶರ್ಮಾ, ಶರಣಬಸಪ್ಪ ಮಮಶೆಟ್ಟಿ, ಮರಿಯಪ್ಪ ಹಳ್ಳಿ, ರಾಮು ಜಾಧವ್, ಮುಬೀನ್ ಅಹ್ಮದ್, ಪದ್ಮಿನಿ ಕಿರಣಗಿ, ಗುಂಡಮ್ಮ ಮಡಿವಾಳ, ಪದ್ಮಾವತಿ ಮಾಲಿಪಾಟೀಲ್, ಅಶೋಕ ಘೂಳಿ, ಜಗನ್ನಾಥ ಎಸ್.ಎಚ್., ಲವಿತ್ರ ವಸ್ತ್ರದ್, ಪ್ರಿಯಾಂಕಾ, ಸೀಮಾ ಪಾಂಡೆ, ಧನರಾಜ್, ರವಿ ಸಜ್ಜನ್, ಎಸ್.ಆರ್. ಕೊಲ್ಲೂರು, ಸರ್ವೇಶ್, ಇಮಾಮ್ ನದಾಫ್, ಶಿವಶರಣಪ್ಪ ಮೂಳೆಗಾಂವ್ ಸೇರಿದಂತೆ ಹಲವರು ಭಾಗವಹಿಸಿದ್ದರು.






