Kalaburagi | ಎಸ್.ಎಂ.ಪಂಡಿತ್ ರಂಗಮಂದಿರ ನವೀಕರಣ ಕಳಪೆ ಕಾಮಗಾರಿ : ಕ್ರಮಕ್ಕೆ ಆಗ್ರಹ

ಕಲಬುರಗಿ : ನಗರದ ಎಸ್.ಎಂ. ಪಂಡಿತ್ ರಂಗಮಂದಿರದ ನವೀಕರಣ ಕಾಮಗಾರಿಗೆ ಸುಮಾರು 4.80 ಕೋಟಿ ರೂ. ವೆಚ್ಚ ಮಾಡಿದ್ದರೂ, ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಕಳಪೆ ಕಾಮಗಾರಿ ನಡೆದಿರುವುದಾಗಿ ಆರೋಪಿಸಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಶುಕ್ರವಾರ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಫರತಾಬಾದ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಈ ಕುರಿತು ಒತ್ತಾಯಿಸಲಾಯಿತು.
ಸಾರ್ವಜನಿಕ ಕಾರ್ಯಕ್ರಮದ ವೇಳೆ ರಂಗಮಂದಿರದ ಮೇಲ್ದಾವಣಿಯ ಪಿ.ಯು.ಪಿ ಭಾಗಗಳು ಕುಸಿಯುತ್ತಿರುವುದು ಗಮನಕ್ಕೆ ಬಂದಿದ್ದು, ವೇದಿಕೆಯಲ್ಲಿ ಅತಿಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆಯಿಲ್ಲದಿರುವುದು ಬೆಳಕಿಗೆ ಬಂದಿದೆ ಎಂದು ಮುಖಂಡರು ಆರೋಪಿಸಿದ್ದಾರೆ.
ಇದಲ್ಲದೆ, ಕುಡಿಯುವ ನೀರು, ಫ್ಯಾನ್ಗಳ ಕೊರತೆ ಹಾಗೂ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಇಷ್ಟೊಂದು ದೊಡ್ಡ ಮೊತ್ತ ವೆಚ್ಚ ಮಾಡಿದರೂ ಅಗತ್ಯ ಸೌಲಭ್ಯಗಳು ಲಭ್ಯವಾಗದಿರುವುದು ದುರ್ದೈವಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳಪೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಅವರ ಪರವಾನಗಿ ರದ್ದುಪಡಿಸಬೇಕು. ಜೊತೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಂಡು, ರಂಗಮಂದಿರದಲ್ಲಿ ತಕ್ಷಣ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸುರೇಶ್ ಬಡಿಗೇರ, ಸುರೇಶ್ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ, ಶಿವಕುಮಾರ ಯಾದವ ಹಾಗೂ ಪಿಂಟು ಜಮಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.






