Kalaburagi | ರೌಡಿ ಶೀಟರ್ ಅಶೋಕ ಸಿಂಗೆ ಬೆಂಗಳೂರಿಗೆ ಗಡಿಪಾರು

ಕಲಬುರಗಿ: ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಅಶೋಕ ವಿಠಲರಾವ ಸಿಂಗೆ (40) ಎಂಬಾತನನ್ನು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕಲಬುರಗಿ ನಗರದಿಂದ ಗಡಿಪಾರು ಮಾಡಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಕಳುಹಿಸಲಾಗಿದೆ.
ಕೆಎಸ್ಆರ್ಟಿಸಿ ಕಾಲೋನಿ ನಿವಾಸಿಯಾಗಿರುವ ಅಶೋಕ ಸಿಂಗೆ ಗೌಂಡಿ ಕೆಲಸ ಮಾಡುತ್ತಿದ್ದು, 2003ರಿಂದ 2026ರವರೆಗೆ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ 8 ಪ್ರಕರಣಗಳು, ಎನ್ಡಿಪಿಎಸ್ ಕಾಯ್ದೆಯಡಿ 4 ಪ್ರಕರಣಗಳು ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ 4 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆತನನ್ನು ‘ಎ’ ರೌಡಿ ಎಂದು ಗುರುತಿಸಲಾಗಿದ್ದು, ರೌಡಿ ಶೀಟ್ ಪ್ರಸ್ತುತ ಚಾಲ್ತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಶೋಕ ಸಿಂಗೆ ವಿರುದ್ಧ ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲೆ ಹಲ್ಲೆ, ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸುವುದು, ಅಕ್ರಮ ಕೂಟ ರಚನೆ, ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ, ಶಾಂತಿ ಭಂಗಕ್ಕೆ ಕಾರಣವಾಗುವ ಕೃತ್ಯಗಳು, ಸಾರ್ವಜನಿಕರಿಗೆ ಜೀವ ಬೆದರಿಕೆ, ಅಪರಾಧಿಕ ಬೆದರಿಕೆ ಹಾಗೂ ಅಕ್ರಮವಾಗಿ ಗಾಂಜಾ ಸಂಗ್ರಹಣೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳು ದಾಖಲಾಗಿವೆ. ಈತನ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದ ಮೇರೆಗೆ ಅಶೋಕ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸತೀಶ ಕಣಿಮೇಶ್ವರ ಅವರು ಆರೋಪಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55ರ ಅಡಿಯಲ್ಲಿ ಗಡಿಪಾರು ಮಾಡುವಂತೆ ವರದಿ ಸಲ್ಲಿಸಿದ್ದರು.
ಈ ವರದಿಯ ಆಧಾರದ ಮೇಲೆ ಕಲಬುರಗಿ ನಗರದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಶಾಲೂ ಅವರು ವಿಚಾರಣೆ ನಡೆಸಿ, ಅಶೋಕ ಸಿಂಗೆ ಅವರನ್ನು ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಿದ್ದಾರೆ.






