Kalaburagi | ಸಂಸ್ಕೃತ ಭಾರತೀಯ ಜ್ಞಾನ, ಮೌಲ್ಯ ಹಾಗೂ ಸಂಸ್ಕೃತಿಯ ಜೀವನಾಡಿ: ಶ್ರೀಕಂಠ ಮೂರ್ತಿ

ಕಲಬುರಗಿ: ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ಭಾರತೀಯ ಜ್ಞಾನ, ಮೌಲ್ಯ ಹಾಗೂ ಸಂಸ್ಕೃತಿಯ ಜೀವನಾಡಿಯಾಗಿದೆ ಎಂದು ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಶ್ರೀಕಂಠ ಮೂರ್ತಿ ಹೇಳಿದರು.
ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಹಾಗೂ ನವನಿಹಾಳದ ಶ್ರೀ ಸತ್ಯಸಾಯಿ ವಿದ್ಯಾನಿಕೇತನಂನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಸಂಸ್ಕೃತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಸ್ಕೃತ ಅಧ್ಯಯನದ ಮೂಲಕ ವಿದ್ಯಾರ್ಥಿಗಳು ಭಾರತೀಯ ಜ್ಞಾನ ಪರಂಪರೆಯನ್ನು ಅರಿತುಕೊಳ್ಳಬೇಕು. ಪ್ರಾಚೀನ ಜ್ಞಾನ ಸಂಪತ್ತನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಂಸ್ಕೃತ ಚಟುವಟಿಕೆಗಳ ಕುರಿತು ವಿಡಿಯೊ ಪ್ರದರ್ಶಿಸಲಾಯಿತು. ಸಂಸ್ಕೃತ ಭಾಷೆಯ ಪ್ರಚಾರ ಮತ್ತು ಪ್ರಸಾರಕ್ಕಾಗಿ ಆರಂಭಿಸಿರುವ ‘ಸಂಸ್ಕೃತವಾಣಿ’ ಚಾನೆಲ್ನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.
ಮುಖ್ಯ ಅತಿಥಿಯಾಗಿದ್ದ ಸಂಸ್ಕೃತ ವಿದ್ವಾಂಸ ಹಾಗೂ ಶಿಕ್ಷಣ ತಜ್ಞ ಪ್ರೊ. ಸುರೇಶ್ ಹೆರೂರ್ ಅವರು ಸಂಸ್ಕೃತ ಭಾಷೆಯ ಮಹತ್ವ, ಭಾರತೀಯ ಜ್ಞಾನ ಪರಂಪರೆಯ ಸಂರಕ್ಷಣೆ ಹಾಗೂ ಯುವಜನರಲ್ಲಿ ಸಂಸ್ಕೃತ ಅಧ್ಯಯನ ಬೆಳೆಸುವ ಅಗತ್ಯದ ಕುರಿತು ಮಾತನಾಡಿದರು.
ವಿಶೇಷ ಅತಿಥಿಯಾಗಿದ್ದ ಆರ್ಎಸ್ಎಸ್ ಜಿಲ್ಲಾ ಪ್ರಮುಖ್ ವಿಜಯ ಮಹಾಂತೇಶ ಮಾತನಾಡಿ, ಸಂಸ್ಕೃತವು ಭಾರತೀಯ ಸಂಸ್ಕೃತಿಯ ಆತ್ಮವಾಗಿದ್ದು, ಭಾಷೆಯ ಮೂಲಕ ಸಂಸ್ಕಾರ ಹಾಗೂ ರಾಷ್ಟ್ರಭಾವ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಸಂಸ್ಕೃತ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಕೃತ ಭಾಷೆಯ ಬೆಳವಣಿಗೆಗೆ ಶ್ರಮಿಸುತ್ತಿರುವ ಶಿಕ್ಷಕರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಎರಡು ಸಂಸ್ಕೃತ ಗೀತೆಗಳು ಕಾರ್ಯಕ್ರಮದ ಮೆರುಗು ಹೆಚ್ಚಿಸಿದವು. ಬಳಿಕ ಮುಖ್ಯ ಅತಿಥಿಗಳನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.






