Kalaburagi | ಸೆ.16ರಂದು 371(ಜೆ) ಸಾಧನೆ–ಆಶಯ ಕುರಿತು ಸರಣಿ ವಿಚಾರ ಸಂಕಿರಣ: ಲಕ್ಷ್ಮಣ್ ದಸ್ತಿ

ಕಲಬುರಗಿ: ಸಂವಿಧಾನದ 371(ಜೆ) ಕಲಂನ ಅನುಷ್ಠಾನದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆಗಿರುವ ಸಾಧನೆಗಳು ಹಾಗೂ ಮುಂದಿನ ಅಭಿವೃದ್ಧಿಯ ಆಶಯಗಳ ಕುರಿತು ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸರಣಿ ವಿಚಾರ ಸಂಕಿರಣಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 16ರಂದು ಶರಣಬಸವ ವಿಶ್ವವಿದ್ಯಾಲಯದ ಕ್ಯಾಂಪಸ್ನ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ನಡೆಯಲಿದೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಶರಣಬಸವ ವಿಶ್ವವಿದ್ಯಾಲಯ ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ.
ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹಿ ಪೀಠಾಧಿಪತಿ ಪೂಜ್ಯ ಶ್ರೀ ದೊಡ್ಡಪ್ಪ ಎಸ್. ಅಪ್ಪ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಡಾ. ದಾಕ್ಷಾಯಣಿ ಎಸ್. ಅಪ್ಪ ಪಾವನ ಸಾನಿಧ್ಯ ವಹಿಸಲಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಡಾ. ಅಜಯಸಿಂಗ್, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಕೆಬಿಎನ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಜರತ್ ಹಾಫೀಜ್ ಡಾ. ಸೈಯದ್ ಮಹಮ್ಮದ್ ಅಲಿ ಅಲ್ ಹುಸೇನಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುಮಾರು 13 ವರ್ಷಗಳ ಹಿಂದೆ ಜಾರಿಯಾದ 371(ಜೆ) ವಿಶೇಷ ಸ್ಥಾನಮಾನದ ಪರಿಣಾಮವಾಗಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು ಹಾಗೂ ಈ ಭಾಗದ ಜನರಿಗೆ ದೊರೆತಿರುವ ಪ್ರಯೋಜನಗಳು, ಇನ್ನೂ ಈಡೇರಬೇಕಿರುವ ನಿರೀಕ್ಷೆಗಳು ಮತ್ತು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರಣಿ ವಿಚಾರ ಸಂಕಿರಣಗಳಲ್ಲಿ ಚರ್ಚೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ ವಹಿಸಲಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶೇಖ್ ಅಜಮಲ್ ಗೋಲಾ, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಡಾ. ಲಕ್ಷ್ಮಣ ದಸ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






