ಕಲಬುರಗಿ | ಕಲ್ಯಾಣ ಕರ್ನಾಟಕ ಕೋಗಿಲೆ ಸೀಝನ್-3ಗೆ ಶರಣಬಸವ ವಿವಿಯ ವೇದಿಕಾ ಆಯ್ಕೆ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ, ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ವೇದಿಕಾ ಎಸ್. ಮಠಪತಿ ಕರ್ನಾಟಕ ಸಂಘಟನಾ ವೇದಿಕೆ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಕೋಗಿಲೆ ಸೀಝನ್-3 ಅಂತಿಮ ಸುತ್ತಿನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರು ವೇದಿಕಾ ಅವರನ್ನು ಅಭಿನಂದಿಸಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ ಮತ್ತು ಇತರರ ಸಮ್ಮುಖದಲ್ಲಿ ವೇದಿಕಾ ಸಾಧನೆಗಾಗಿ ಅವರನ್ನು ಸನ್ಮಾನಿಸಿದರು.
475ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದ ಕಠಿಣ ಪ್ರಾಥಮಿಕ ಸುತ್ತುಗಳಲ್ಲಿ ಉತ್ತೀರ್ಣರಾಗಿ ಕಲ್ಯಾಣ ಕರ್ನಾಟಕ ಕೋಗಿಲೆ ಸೀಝನ್-3ರ ಅಂತಿಮ ಸುತ್ತಿಗೆ ಅರ್ಹತೆ ಪಡೆದ 15 ಇತರ ವಿದ್ಯಾರ್ಥಿಗಳಲ್ಲಿ ವೇದಿಕಾ ಕೂಡ ಒಬ್ಬರು ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು ತಿಳಿಸಿದ್ದಾರೆ.
ಅಂತಿಮ ಸ್ಪರ್ಧೆಯು ನ.22 ರಂದು ಎಸ್. ಎಂ. ಪಂಡಿತ್ ರಂಗ ಮಂದಿರದಲ್ಲಿ ನಡೆಯಲಿದೆ.





