Kalaburagi | ಪಿಎಸಿಎಸ್ ಕಾರ್ಯದರ್ಶಿಗಳಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಎಸಿಎಸ್) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕಾರ್ಯದರ್ಶಿಗಳು ಸಹಕಾರ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಲೆಕ್ಕಪತ್ರ ನಿರ್ವಹಣೆ ಹಾಗೂ ಕಾಯ್ದೆ ತಿದ್ದುಪಡಿಗಳ ಕುರಿತು ಸಮಗ್ರ ಜ್ಞಾನ ಹೊಂದಿರಬೇಕು ಎಂದು ಕಲಬುರಗಿ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷೆ ಸುನಂದಾ ಬಿ. ಪಾಟೀಲ್ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕಲಬುರಗಿ ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಕಲಬುರಗಿ, ಕಮಲಾಪುರ, ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳ ಪಿಎಸಿಎಸ್ ಕಾರ್ಯದರ್ಶಿಗಳಿಗಾಗಿ ನಗರದ ಕೆಐಸಿಎಂ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಿಎಸಿಎಸ್ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹ ಅಥವಾ ಸಮಸ್ಯೆಗಳಿದ್ದಲ್ಲಿ ತರಬೇತಿ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿ ಪಡೆದು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಎಲಿಮನಿ ಮಾತನಾಡಿ, ಪಿಎಸಿಎಸ್ಗಳು ಕೇವಲ ಕೆಸಿಸಿ ಸಾಲ ಹಾಗೂ ಗೊಬ್ಬರ ವ್ಯವಹಾರಕ್ಕೆ ಸೀಮಿತವಾಗದೆ ವಿವಿಧ ರೀತಿಯ ವ್ಯವಹಾರಗಳನ್ನು ಅಳವಡಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲ ಪಿಎಸಿಎಸ್ಗಳು ಸಿಎಸ್ಸಿ ಕೇಂದ್ರಗಳನ್ನು ಸ್ಥಾಪಿಸಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ವಿವಿಧ ಸೇವೆಗಳನ್ನು ಒದಗಿಸುವತ್ತ ಗಮನಹರಿಸಬೇಕು ಎಂದರು.
ನಿರ್ದೇಶಕ ಮಹೇಶ ಧರಿ ಮಾತನಾಡಿ, ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಜಾರಿಗೆ ಬಂದಿರುವ ಕಾಯ್ದೆ ತಿದ್ದುಪಡಿಗಳನ್ನು ಸಮರ್ಪಕವಾಗಿ ಅಳವಡಿಸಿಕೊಂಡು ನಿಯಮಾನುಸಾರ ಉತ್ತಮ ಆಡಳಿತ ನಡೆಸಬೇಕು ಎಂದು ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಲೆಕ್ಕಪತ್ರ ನಿರ್ವಹಣೆ, ಇತ್ತೀಚಿನ ಕಾಯ್ದೆ ತಿದ್ದುಪಡಿಗಳು ಹಾಗೂ ಅವುಗಳನ್ನು ಸಂಘಗಳ ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳುವ ಕುರಿತು ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಿದರು. ಅಫಜಲಪುರ ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಬಸವ ಮಾಡೋಳೆ, ರಾಯಚೂರು ಕೃಷಿ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ರವೀಂದ್ರ ಪಾಟೀಲ್ ಹಾಗೂ ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಟಿ. ಗುರುಬಸಪ್ಪ ಅವರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುಳಾ ಎಸ್. ಬಿರಾದರ ಅವರು ಸಹಕಾರ ಶಿಕ್ಷಣ, ತರಬೇತಿ ಹಾಗೂ ಪ್ರಚಾರ ಕಾರ್ಯಗಳ ಯೋಜನೆಗಳು ಮತ್ತು ಒಕ್ಕೂಟದ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆಯ ಉಪನಿರ್ದೇಶಕ ಎಸ್. ಸಂದೀಪ ರೆಡ್ಡಿ, ಅಫಜಲಪುರ ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆಯ ಸಹಾಯಕ ನಿರ್ದೇಶಕ ಶರಣಬಸವ ಮಡೋಳೆ ಹಾಗೂ ಕೆಐಸಿಎಂ ಪ್ರಾಂಶುಪಾಲ ಅರುಣಕುಮಾರ ಹರಸೂರ ಉಪಸ್ಥಿತರಿದ್ದರು. ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುಳಾ ಎಸ್. ಬಿರಾದರ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪ್ರಾಂಶುಪಾಲ ಅರುಣಕುಮಾರ ಹರಸೂರ ವಂದಿಸಿದರು.






