Kalaburagi | ಮಾತೃವಂದನಾ ಯೋಜನೆ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳಿಗೆ ತರಬೇತಿ

ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿಯ ಸದುಪಯೋಗ ಪಡೆದು ಫಲಾನುಭವಿಗಳಿಗೆ ಪರಿಣಾಮಕಾರಿ ಸೇವೆ ಒದಗಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ನಿರೂಪಣಾಧಿಕಾರಿ ಮುರುಗೇಶ ಗುಣಾರಿ ಮಾತನಾಡಿ, ಯೋಜನೆಯ ಅನುಷ್ಠಾನದಲ್ಲಿ ಹಲವು ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳ ಕುರಿತು ಸಂಪೂರ್ಣ ಮಾಹಿತಿ ಪಡೆದು ಸಮಸ್ಯೆಗಳನ್ನು ನಿವಾರಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಮಾತನಾಡಿ, ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ ಮಾಸ್ಟರ್ ಟ್ರೇನರ್ಗಳ ಮೂಲಕ ಈ ಕಾರ್ಯಾಗಾರ ನಡೆಸಲಾಗುತ್ತಿದ್ದು, ಇದರಿಂದ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚಲು ನೆರವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಐಪಿಇ ಗ್ಲೋಬಲ್ ಸಂಸ್ಥೆಯ ಸ್ಟೇಟ್ ಪ್ರೋಗ್ರಾಮ್ ಮ್ಯಾನೇಜರ್ ಆಬೇದ ಅಹ್ಮದ್, ಪಿಎಮ್ಎಮ್ವಿವೈ ಸ್ಪೇಷಾಲಿಸ್ಟ್ ರಾಹುಲ್ ಮಹಾದೇವ, ಟ್ರೇನಿಂಗ್ ಆಂಡ್ ಕಮ್ಯೂನಿಕೇಷನ್ಸ್ ಎಕ್ಸ್ಪರ್ಟ್ ಅಡಿವೆಪ್ಪಗೌಡ ಹಾದಿಮನಿ, ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕಿಯರು, ವಲಯ ಮೇಲ್ವಿಚಾರಕಿಯರು, ತಾಲೂಕು ಪೋಷಣ ಸಂಯೋಜಕರು, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು, ಚಿಗುರು ಯೋಜನೆಯ ಡಿಸ್ಟಿಕ್ಟ್ ಸಪೋರ್ಟ್ ಮ್ಯಾನೇಜರ್, 9 ಯೋಜನೆಗಳ ಇಂಪ್ಲಿಮೇಟಿoಗ್ ಸಪೋರ್ಟಿಂಗ್ ಆಫೀಸರ್ಗಳು ಉಪಸ್ಥಿತರಿದ್ದರು.
ಜಿಲ್ಲಾ ಮಿಷನ್ ಸಂಯೋಜಕಿ ವಿಜಯಲಕ್ಷ್ಮಿ ಮೇಳಕುಂದಿ ಕಾರ್ಯಕ್ರಮ ನಿರೂಪಿಸಿದರು. ಪ್ರಾರಂಭದಲ್ಲಿ ಯಲ್ಲಪ್ಪ ಸ್ವಾಗತಿಸಿದರು. ಕೊನೆಯಲ್ಲಿ ಮಹಬೂಬ ಕುಕನೂರ ವಂದಿಸಿದರು.






