ನಾಡಿನ ಪ್ರಗತಿಗೆ ಕೆಂಪೇಗೌಡರ ಕೊಡುಗೆ ಅನನ್ಯ: ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ನಾಡಪ್ರಭು ಶ್ರೀ ಕೆಂಪೇಗೌಡ ಅವರು ಕರ್ನಾಟಕದ ಇತಿಹಾಸದಲ್ಲಿ ಅಜರಾಮರ ವ್ಯಕ್ತಿತ್ವವಾಗಿದ್ದು, ಬೆಂಗಳೂರಿನ ನಿರ್ಮಾಣ ಹಾಗೂ ಅಭಿವೃದ್ಧಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸುಮಾರು ಐದು ಶತಮಾನಗಳ ಹಿಂದೆ ಬೆಂಗಳೂರಿನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿ, ಜನಪರ ಆಡಳಿತಕ್ಕೆ ಮಾದರಿಯಾಗಿದ್ದ ಕೆಂಪೇಗೌಡರು ಸಮಾಜಸೇವೆ ಹಾಗೂ ಬಡವರ ಏಳಿಗೆಗಾಗಿ ಶ್ರಮಿಸಿದ್ದರು. ಶ್ರೀರಂಗಪಟ್ಟಣ, ಮೈಸೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಇಂದಿಗೂ ಸ್ಮರಣೀಯವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ಶಿವಪ್ರಭು ಹಿರೇಮಠ್ ಮಾತನಾಡಿ, ಬುದ್ಧ, ಬಸವಣ್ಣ, ವಾಲ್ಮೀಕಿ ಸೇರಿದಂತೆ ಮಹನೀಯರು ಸಮಾಜಕ್ಕೆ ಹೊಸ ದಿಕ್ಕು ತೋರಿದವರು. ಜಾತಿ, ಧರ್ಮಗಳ ಭೇದವಿಲ್ಲದೆ ಅವರ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಮಾಜದ ಮುಖಂಡ ಅಣ್ಣಾರಾವ್ ದುಗೊಂಡ ಅವರು ವಿಶೇಷ ಉಪನ್ಯಾಸ ನೀಡಿ, ಕೆಂಪೇಗೌಡರ ಇತಿಹಾಸ ಹಾಗೂ ಅವರ ವಂಶಸ್ಥರ ಸಾಧನೆಗಳನ್ನು ಸಮಗ್ರವಾಗಿ ತಿಳಿಯಲು ಶಾಸನಗಳು, ತಾಳೆಗರಿಗಳು ಮತ್ತು ಐತಿಹಾಸಿಕ ದಾಖಲೆಗಳ ಕುರಿತು ಆಳವಾದ ಅಧ್ಯಯನ ಅಗತ್ಯವಿದೆ ಎಂದು ಹೇಳಿದರು.
ಕರ್ನಾಟಕ ಮತ್ತು ತಮಿಳುನಾಡಿನ ಇತಿಹಾಸಕಾರರು ಪರಸ್ಪರ ಸಂಶೋಧನೆ ಹಾಗೂ ವೈಚಾರಿಕ ಸಂವಾದ ನಡೆಸಿದಾಗ ಮಾತ್ರ ಕೆಂಪೇಗೌಡರ ಇತಿಹಾಸಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ನಿಖರ ಉತ್ತರ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಹಾಪೌರ ವರ್ಷಾ ರಾಜೀವ ಜಾನೆ, ಜಿಲ್ಲಾ ಅಧ್ಯಕ್ಷ ಶಿವಯೋಗಪ್ಪ ಬಿ. ಚಿತ್ತಾಪುರ ಗುಂಡಗುರ್ತಿ, ಶ್ರೀ ಕುಡು ಒಕ್ಕಲಿಗ ಅಭಿವೃದ್ಧಿ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವರಾಜ್ ಪಾಟೀಲ, ಸಮಾಜದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






