ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಚಾಲನೆ

ಕಲಬುರಗಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆಗಿಂತ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯದ ಕೊರತೆಯೇ ದೊಡ್ಡ ಸವಾಲಾಗಿದೆ. ಯುವಕರು ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದರು.
ನಗರದ ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಎಕ್ಸಿಲರೇಟರ್ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಲ್ಲ. ಆದರೆ ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳ ಕೊರತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ಕಿಲ್ ಕನೆಕ್ಟ್ ಹಾಗೂ ಯುವ ನಿಧಿ ಪ್ಲಸ್ ಯೋಜನೆಗಳ ಮೂಲಕ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಸ್ವಂತ ಊರಿನಲ್ಲೇ ಉದ್ಯೋಗ ಸಿಗಬೇಕು ಎಂಬ ಮನೋಭಾವದಿಂದ ಯುವಕರು ಹೊರಬರಬೇಕು. ಆರಂಭದಲ್ಲಿ ದೊರೆಯುವ ಉದ್ಯೋಗವನ್ನು ಸ್ವೀಕರಿಸಿ ಅನುಭವ ಗಳಿಸಿದರೆ ಮುಂದಿನ ದಿನಗಳಲ್ಲಿ ಉತ್ತಮ ಅವಕಾಶಗಳು ತೆರೆದುಕೊಳ್ಳುತ್ತವೆ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಪದವೀಧರರು ಮತ್ತು ಡಿಪ್ಲೊಮಾ ಪಡೆದವರು ಯುವ ನಿಧಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದರೂ, ಉದ್ಯೋಗ ಮೇಳಗಳು ಹಾಗೂ ಕೌಶಲ್ಯ ತರಬೇತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಭಾಗವಹಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಸಚಿವರು, ಉದ್ಯೋಗ ನೀಡಲು ಕಂಪನಿಗಳು ಮುಂದೆ ಬರುತ್ತಿರುವ ಸಂದರ್ಭದಲ್ಲಿ ಯುವಕರು ಈ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಭೌತಿಕ ಉದ್ಯೋಗ ಮೇಳಗಳಿಗೆ ಆಗುವ ವೆಚ್ಚ ಹಾಗೂ ಅಭ್ಯರ್ಥಿಗಳ ಪ್ರಯಾಣದ ತೊಂದರೆ ತಪ್ಪಿಸಲು ಸ್ಕಿಲ್ ಕನೆಕ್ಟ್ ಎಂಬ ಆನ್ಲೈನ್ ವೇದಿಕೆ ರೂಪಿಸಲಾಗಿದ್ದು, ಇದರ ಮೂಲಕ ಅಭ್ಯರ್ಥಿಗಳು ಆನ್ಲೈನ್ನಲ್ಲೇ ನೋಂದಣಿ, ಸಂದರ್ಶನ ಹಾಗೂ ಉದ್ಯೋಗ ಹುಡುಕಾಟ ನಡೆಸಬಹುದು ಎಂದು ವಿವರಿಸಿದರು.
ಶೀಘ್ರದಲ್ಲೇ ರಾಜ್ಯದಲ್ಲಿ ಸುಮಾರು 70 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
80ಕ್ಕೂ ಹೆಚ್ಚು ಕಂಪನಿಗಳ ಭಾಗಿ :
ಎಕ್ಸಿಲರೇಟರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೌಶಿಕ್ ಸುಂದರರಾಜು ಮಾತನಾಡಿ, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ವೇದಿಕೆಯನ್ನು ರೂಪಿಸಲಾಗಿದೆ. ಈಗಾಗಲೇ ಮೂರು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡಿದ್ದು, ನಾಲ್ಕು ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲು 80ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ ಎಂದು ತಿಳಿಸಿದರು.
ಎಕ್ಸಿಲರೇಟರ್ ಸಂಸ್ಥೆಯ ನಿರ್ದೇಶಕ (ಕಾರ್ಯಾಚರಣೆ) ಡಾ. ಟಿ.ಎನ್. ಶ್ರೀನಿವಾಸ ಪ್ರಾಸ್ತಾವಿಕವಾಗಿ ಮಾತನಾಡಿ, ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಅವಕಾಶ ನೀಡಿದ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು. ಮೊದಲ ಹಂತದಲ್ಲೇ ಕೆಲ ಅಭ್ಯರ್ಥಿಗಳು ಆನ್ಲೈನ್ ಮೂಲಕ ಉದ್ಯೋಗದ ಆಫರ್ ಲೆಟರ್ ಪಡೆದಿರುವುದಾಗಿ ಹೇಳಿದರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ :
ಈ ಸಂದರ್ಭದಲ್ಲಿ ಆನ್ಲೈನ್ ಸಂದರ್ಶನದಲ್ಲಿ ಆಯ್ಕೆಯಾದ ಕಿರಣಕುಮಾರ, ದೀಪಕ್ ಸೇರಿದಂತೆ ಹಲವು ಅಭ್ಯರ್ಥಿಗಳಿಗೆ ಸಚಿವ ಡಾ. ಶರಣಪ್ರಕಾಶ ಪಾಟೀಲ ನೇಮಕಾತಿ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು. ಬಳಿಕ ವಿವಿಧ ಕಂಪನಿಗಳ ಸಂದರ್ಶನ ಕೇಂದ್ರಗಳಿಗೆ ಭೇಟಿ ನೀಡಿ ನೇಮಕಾತಿ ಪ್ರಕ್ರಿಯೆ ಪರಿಶೀಲಿಸಿದರು.
ಉದ್ಯೋಗ ಮೇಳದಲ್ಲಿ ಇನ್ಫೋಸಿಸ್, ಹೆಚ್ಸಿಎಲ್ ಟೆಕ್ನಾಲಜೀಸ್, ಸ್ಯಾಮ್ಸಂಗ್, ಮರ್ಸಿಡಿಸ್-ಬೆನ್ಜ್ ಇಂಡಿಯಾ, ಜೆಸಿಬಿ ಇಂಡಿಯಾ, ಸ್ನೈಡರ್ ಎಲೆಕ್ಟ್ರಿಕ್, ಮಹೀಂದ್ರಾ & ಮಹೀಂದ್ರಾ, ಟಾಟಾ ಎಲೆಕ್ಟ್ರಾನಿಕ್ಸ್, ಡಿಕ್ಸಾನ್ ಟೆಕ್ನಾಲಜೀಸ್, ಹೆಚ್ಡಿಎಫ್ಸಿ, ಫಾಕ್ಸ್ಕಾನ್, ವರ್ಲ್ಪೂಲ್ ಹಾಗೂ ಬ್ರಿಡ್ಜ್ಸ್ಟೋನ್ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಕಂಪನಿಗಳು ಭಾಗವಹಿಸಿ ಸಾವಿರಾರು ಉದ್ಯೋಗಾವಕಾಶಗಳನ್ನು ನೀಡಿದವು.
ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ್, ಹಿರಿಯ ಸಹಾಯಕ ಆಯುಕ್ತೆ ಸಾಹಿತ್ಯ ಅಲದಕಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗುಬಾಯಿ ಸೂರ್ಯವಂಶಿ, ಹೆಚ್.ಕೆ.ಇ. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರಾಜಾ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಉದ್ಯಮ ಪ್ರತಿನಿಧಿಗಳು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.






