ಕಲ್ಯಾಣ ಕರ್ನಾಟಕ ಉತ್ಸವ | ಮುಖ್ಯಮಂತ್ರಿಗಳಿಂದ 1,775.41 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಲ್ಯಾಣ ಕರ್ನಾಟಕ ಭಾಗದ 1,775.41 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ರಾಜ್ಯದ ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬುಧವಾರ ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಜೆ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಲಿದ್ದು, ಸಂಜೆ 7.40ಕ್ಕೆ ಸಾರ್ವಜನಿಕ ಉದ್ಯಾನವನದಲ್ಲಿ ಆಯೋಜಿಸಿರುವ ಸ್ಟ್ರೀಟ್ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ರಾತ್ರಿ 8.30ಕ್ಕೆ ಅಪ್ಪ ಕೆರೆ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಕಾಮಗಾರಿಗಳನ್ನು ವೀಕ್ಷಿಸಲಿದ್ದಾರೆ ಎಂದರು.
ಮುಖ್ಯಮಂತ್ರಿಗಳು ಗುರುವಾರ ಬೆಳಿಗ್ಗೆ 8.30ಕ್ಕೆ ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಪ್ರದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಇದೇ ವೇದಿಕೆಯಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,071.56 ಕೋಟಿ ವೆಚ್ಚದ 557 ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಲಾಗುವುದು. ಅಲ್ಲದೆ, 703.85 ಕೋಟಿ ವೆಚ್ಚದ 244 ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಒಟ್ಟಾರೆ 1,775.41 ಕೋಟಿ ವೆಚ್ಚದ 801 ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಬರ ಘೋಷಣೆಗೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರವೇ ಬರ ಘೋಷಣೆ ಮಾಡಬೇಕಾಗುತ್ತದೆ. ನಿಯಮಾವಳಿಗಳನ್ನು ಸರಳೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದ್ದು, ಇದುವರೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಇದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದರು.
ಇನ್ನೂ ಎರಡು ವಾರಗಳ ಕಾಲ ಮಳೆಯ ಪರಿಸ್ಥಿತಿಯನ್ನು ಗಮನಿಸಿ, ಜಿಲ್ಲೆಗಳಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದು ನಮ್ಮ ಸರ್ಕಾರ ಎಂದು ಹೇಳಿದ ಅವರು, ಬರ ಘೋಷಣೆ ಮಾಡಬೇಕೆಂದು ವಿರೋಧ ಪಕ್ಷದವರು ಇಲ್ಲಿ ಅನಗತ್ಯ ಹೋರಾಟ ನಡೆಸುತ್ತಿದ್ದಾರೆ. ತಮ್ಮದೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಎನ್ಡಿಆರ್ಎಫ್ ನಿಯಮಾವಳಿಗಳನ್ನು ಸರಳೀಕರಿಸುವಂತೆ ಒತ್ತಾಯಿಸಿ ರೈತರಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಹೇಳಿದರು.
ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ:
ತಳವಾರ ಸಮುದಾಯದವರಿಗೆ ಎಸ್ಟಿ ಪ್ರಮಾಣಪತ್ರ ನೀಡುವ ಕುರಿತಂತೆ ಮಾತನಾಡಿದ ಸಚಿವರು, ಕಳೆದ ಬೆಳಗಾವಿ ಅಧಿವೇಶನದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮುದಾಯದ ಮುಖಂಡರೊಂದಿಗೆ ಚರ್ಚಿಸಿಯೇ ಆದೇಶ ಹೊರಡಿಸಿದ್ದರು. ಅದರಂತೆ ಅರ್ಹರಿಗೆ ಎಸ್ಟಿ ಪ್ರಮಾಣಪತ್ರಗಳನ್ನು ನೀಡಲಾಗುತ್ತಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಹಾಗೂ ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ ಉಪಸ್ಥಿತರಿದ್ದರು.






