ಕಲಬುರಗಿ | ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಮಸ್ಯೆ ಬಗೆಹರಿಸುವಂತೆ ಶಶೀಲ್ ನಮೋಶಿ ಒತ್ತಾಯ

ಕಲಬುರಗಿ : ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಿಬ್ಬಂದಿಗಳು ಅನೇಕ ಸಮಸ್ಯೆಗಳಿಂದ ಎದುರಿಸುತ್ತಿದ್ದು, ಅಧಿಕಾರಿಗಳು ದಿನಕ್ಕೊಂದು ಆದೇಶ ಹೊರಡಿಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆತಂಕ ತರುತ್ತಿದ್ದಾರೆ. ಇದು ಅವರ ಪಾಠ-ಪ್ರವಚನಗಳ ಮೇಲೆ ಹಾಗೂ ಫಲಿತಾಂಶದ ಮೇಲೂ ಕೆಟ್ಟ ಪ್ರಭಾವ ಬೀರುತ್ತಿದೆ. ಹೀಗಾಗಿ ಅವರ ಸಮಸ್ಯೆಗಳನ್ನು ಬಗೆಹರಿಸಿ, ಫಲಿತಾಂಶ ಹೆಚ್ಚಾಗುವಂತೆ ಕ್ರಮ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಒತ್ತಾಯಿಸಿದರು.
ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಪ್ರತಿ ಅನುದಾನಿತ ವಿಭಾಗಕ್ಕೆ ಕನಿಷ್ಠ ದಾಖಾಲಾತಿಯನ್ನು 20ಕ್ಕೆ ನಿಗಧಿಪಡಿಸುವುದು, ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕಾರ್ಯಭಾರ ಕಡಿಮೆ ಇರುವ ಕಾಲೇಜುಗಳಿಂದ ಸಮೀಪದ ಕಾರ್ಯಭಾರ ಲಭ್ಯವಿರುವ ಕಾಲೇಜುಗಳಿಗೆ ನಿಯೋಜನೆ ಮಾಡುವುದು, ಕಾರ್ಯಭಾರ ಕಡಿಮೆಯಿರುವ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರನ್ನು ಮತ್ತು ಭೋಕೇತರ ಸಿಬ್ಬಂದಿಗಳಿಗೆ ಕಡ್ಡಾಯ ಸ್ವಯಂ ನಿವೃತ್ತಿ ಆದೇಶ ಹಿಂಪಡೆದು ಕಾರ್ಯಭಾರ ಅಧಿಕವಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ, ಮೋರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಆದರ್ಶ ವಿದ್ಯಾಲಯಗಳಿಗೆ ನಿಯೋಜನೆ ಮಾಡುವುದು, ಸದರಿ ಸಿಬ್ಬಂದಿಗಳಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರುವ ಮೂಲಕ ಸೇವಾ ಭದ್ರತೆ ನೀಡುವುದು, ಹಾಗೂ ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ವೇತನ ಬಿಡುಗಡೆ ಮಾಡಲು ಕಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







