ಸೆ.17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ : ಕೆ.ನೀಲಾ
ಕಲಂ 371(ಜೆ) ಅನುಷ್ಠಾನ, 30 ಸಾವಿರ ಶಿಕ್ಷಕರ ನೇಮಕ ಸೇರಿ ಹಲವು ಬೇಡಿಕೆಗಳ ಮಂಡನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’ ಆಯೋಜಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಹೋರಾಟ ಸಮಿತಿಯ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ನೀಲಾ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಹೋರಾಟಗಾರರು, ಅಭಿವೃದ್ಧಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ ಸಂವಿಧಾನದ ಕಲಂ 371(ಜೆ) ಸಮರ್ಪಕ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ, ದಶಕಗಳಿಂದ ಖಾಲಿ ಇರುವ 30 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುವುದು ಹಾಗೂ ಕೆಕೆಆರ್ಡಿಬಿ ಅನುದಾನದ ನಿಯಮಗಳನ್ನು ಸರಳೀಕರಿಸುವಂತೆ ಆಗ್ರಹಿಸಲಾಗುವುದು ಎಂದು ಹೇಳಿದರು.
ಕೃಷ್ಣಾ ಕೊಳ್ಳದಲ್ಲಿ ಕರ್ನಾಟಕದ ಪಾಲಿನ 700 ಟಿಎಂಸಿ ನೀರನ್ನು ಸಂಪೂರ್ಣವಾಗಿ ಬಳಸಿಕೊಂಡು 15 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಯೋಜನೆ ರೂಪಿಸಬೇಕು. ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 15 ಟಿಎಂಸಿ ನೀರು ಹರಿಸುವ ಬಚಾವತ್ ಆಯೋಗದ ಆದೇಶವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ, ಮೂಲಸೌಕರ್ಯ ಅಭಿವೃದ್ಧಿ, ಯುವಕರಿಗೆ ಕೌಶಲ್ಯ ತರಬೇತಿ, ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿ, ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹ ಹಾಗೂ ಬಳ್ಳಾರಿಯ ಜೀನ್ಸ್ ಉದ್ಯಮವನ್ನು ಇಡೀ ಕಲ್ಯಾಣ ಕರ್ನಾಟಕಕ್ಕೆ ವಿಸ್ತರಿಸುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದರು.
ರೈತರ ಸಾಲಮನ್ನಾ, ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ವಿಶೇಷ ಯೋಜನೆ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಾರ್ಷಿಕ ಕ್ರಿಯಾ ಯೋಜನೆ ರೂಪಿಸಿ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ಡಾ. ಮೀನಾಕ್ಷಿ ಬಾಳಿ, ಅರ್ಜುನ್ ಭದ್ರೆ, ನಾಗೇಂದ್ರ ಥಂಬೆ, ಮರಿಯಪ್ಪ ಹಳ್ಳಿ, ಮಹೇಶ ಎಸ್.ಬಿ., ಸುಧಾಮ ಧನ್ನಿ ಹಾಗೂ ಮಲ್ಲಿಕಾರ್ಜುನ ಕ್ರಾಂತಿ ಉಪಸ್ಥಿತರಿದ್ದರು.






