Kalaburagi | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಗಳು ಆಧಾರವಾಗಲಿ: ಪ್ರೊ.ಬಟ್ಟು ಸತ್ಯನಾರಾಯಣ
ಕರ್ನಾಟಕ ಕೇಂದ್ರೀಯ ವಿವಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಅಧ್ಯಯನ ಮತ್ತು ಸಂಶೋಧನೆಗಳು ಆಧಾರವಾಗಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ದೊರೆತರೂ, ನಿಜಾಮರ ಆಡಳಿತದಲ್ಲಿದ್ದ ಈ ಪ್ರದೇಶವು 1948ರ ಸೆಪ್ಟೆಂಬರ್ 17ರಂದು ಭಾರತ ಒಕ್ಕೂಟಕ್ಕೆ ವಿಲೀನಗೊಂಡಿತು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಸಿಯುಕೆ ಪ್ರಮುಖ ಪಾತ್ರ ವಹಿಸಬೇಕಿದ್ದು, ಈ ಭಾಗದ ಹಿಂದುಳಿಯುವಿಕೆಗೆ ಕಾರಣವಾಗಿರುವ ಅಂಶಗಳನ್ನು ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಅಧ್ಯಯನ ನಡೆಸಬೇಕು ಎಂದು ಕರೆ ನೀಡಿದರು.
ಸಂಶೋಧನೆಯ ಆಧಾರದ ಮೇಲೆ ಸಿದ್ಧವಾಗುವ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಪರಿಣಾಮಕಾರಿ ನೀತಿ ರೂಪಣೆಗೆ ಕೊಡುಗೆ ನೀಡಬೇಕು. ವಿಶ್ವವಿದ್ಯಾಲಯದ ಸಂಶೋಧನಾ ಚಟುವಟಿಕೆಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವೇಗ ನೀಡುವಂತಾಗಬೇಕು ಎಂದು ಅವರು ತಿಳಿಸಿದರು.
ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಅಪಾರ ನೈಸರ್ಗಿಕ ಸಂಪನ್ಮೂಲಗಳು ಮತ್ತು ಮಾನವ ಸಾಮರ್ಥ್ಯವನ್ನು ಹೊಂದಿವೆ. ಆ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಪ್ರೊ.ಚನ್ನವೀರ ಆರ್.ಎಂ., ಡಾ. ಸಫಿಯಾ ಪರ್ವಿನ್, ಸಂಶೋಧನಾ ವಿದ್ಯಾರ್ಥಿ ಮಲ್ಲಿಕಾರ್ಜುನ ಹಾಗೂ ಛಾಯಾಚಿತ್ರಕಾರ ಶ್ರವಣ್ ಕುಮಾರ್ ಹಿರೇಮಠ ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಪಾಂಡುರಂಗ ಪತ್ತಿ ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು. ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಂದೇ ಮಾತರಂ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.






