Sedam | ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಅಗತ್ಯ: ಡಾ.ಮುಹಮ್ಮದ್ ಅಸ್ಗರ್ ಚುಲ್ಬುಲ್

ಸೇಡಂ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (SVEEP) ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದ ರಹಮತ್ ನಗರದಲ್ಲಿ ಜಾಗೃತಿ ಸಭೆ ನಡೆಯಿತು.
ಸಮುದಾಯದ ಮುಖಂಡರ ಕೋರಿಕೆಯ ಮೇರೆಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಕುಡಾದ ಮಾಜಿ ಅಧ್ಯಕ್ಷ ಡಾ.ಮುಹಮ್ಮದ್ ಅಸ್ಗರ್ ಚುಲ್ಬುಲ್, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ಸಕ್ರಿಯವಾಗಿ ಭಾಗವಹಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.
ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಎನ್ಯುಮರೇಶನ್ ನಮೂನೆಗಳನ್ನು ವಿತರಿಸುತ್ತಿದ್ದು, ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ತಪ್ಪು ಮಾಹಿತಿ ನೀಡದಂತೆ ಎಚ್ಚರಿಕೆ ವಹಿಸಿ, ಎಲ್ಲಾ ವಿವರಗಳನ್ನು ಪರಿಶೀಲಿಸಿದ ಬಳಿಕವೇ ಅರ್ಜಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳ ಪಾತ್ರದ ಕುರಿತು ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಿದ ಅವರು, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಮತದಾರರಿಗೆ ಮಾಹಿತಿ ನೀಡುವುದು ಮತ್ತು ಅರ್ಜಿ ಭರ್ತಿಗೆ ನೆರವು ಒದಗಿಸುವುದು ಕಾನೂನುಬದ್ಧವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಹೆಚ್ಚಿನ ಜನರ ಭಾಗವಹಿಸುವಿಕೆಗೆ ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಮಸೀದಿಗಳು, ಸಮುದಾಯ ಭವನಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರಿಗೆ ಅರ್ಜಿ ಭರ್ತಿ ಮಾಡಲು ನೆರವು ನೀಡುತ್ತಿರುವುದು ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸುವ ಉದ್ದೇಶದಿಂದಲೇ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಅಝೀಝ್ ಅಹ್ಮದ್ ಖಾನ್, ಮುಫ್ತಿ ಅಬ್ದುಲ್ ಖಾದೀರ್ ಸಾಬ್, ಅಬ್ದುಲ್ ರಫೀಕ್, ಮೊಯಿನುದ್ದೀನ್, ಸೈಯದ್ ಸಾಬೀರ್, ಮುಹಮ್ಮದ್ ಯೂಸುಫ್, ಶಾಫಿ ಅಹ್ಮದ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಬೂತ್ ಮಟ್ಟದ ಏಜೆಂಟರು ಭಾಗವಹಿಸಿದ್ದರು.






