ಸೇಡಂ ತಾಲೂಕನ್ನು ಬಾಲ, ಕಿಶೋರ ಕಾರ್ಮಿಕ ಮುಕ್ತಗೊಳಿಸಲು ಬದ್ಧರಾಗಿ: ಶ್ರೇಯಾಂಕ ಧನಶ್ರೀ

ಸೇಡಂ: ತಾಲೂಕನ್ನು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ತಾಲೂಕನ್ನಾಗಿ ರೂಪಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಶ್ರೇಯಾಂಕ ಧನಶ್ರೀ ಸೂಚಿಸಿದರು.
ಗುರುವಾರ ಸೇಡಂ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಬಾಲಕಾರ್ಮಿಕ ನಿರ್ಮೂಲನಾ, ಪುನರ್ವಸತಿ ಹಾಗೂ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಬಾಲಕಾರ್ಮಿಕರ ಪತ್ತೆ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಸೇಡಂ, ಮಳಖೇಡ, ಮುಧೋಳ, ಕೋಡ್ಲಾ ಹಾಗೂ ಅಡಕಿ ವ್ಯಾಪ್ತಿಯಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಿಯಮಿತವಾಗಿ ದಿಢೀರ್ ದಾಳಿ ನಡೆಸಿ ಬಾಲಕಾರ್ಮಿಕರನ್ನು ನೇಮಿಸಿಕೊಂಡಿರುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ಎಫ್ಐಆರ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ನಿಯಮಾವಳಿಯಂತೆ ನೇಮಕಗೊಂಡಿರುವ ನಿರೀಕ್ಷಕರು ತಿಂಗಳಿಗೆ ಕನಿಷ್ಠ 15 ತಪಾಸಣೆಗಳನ್ನು ಕಡ್ಡಾಯವಾಗಿ ನಡೆಸಬೇಕು. ತಪಾಸಣೆ ಸಂದರ್ಭದಲ್ಲಿ ಬಾಲಕಾರ್ಮಿಕರು ಕಂಡುಬಂದಲ್ಲಿ ಮಕ್ಕಳನ್ನು ರಕ್ಷಿಸಿ, ಸಂಬಂಧಿಸಿದ ಮಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಾಲೆ ತೊರೆದ ಮಕ್ಕಳು, ಬಾಲ್ಯವಿವಾಹ ಹಾಗೂ ಬಾಲಗರ್ಭಿಣಿ ಪ್ರಕರಣಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅಂತಹ ಪ್ರಕರಣಗಳನ್ನು ತಡೆಗಟ್ಟಲು ಇಲಾಖೆಗಳ ನಡುವೆ ಪರಿಣಾಮಕಾರಿ ಸಮನ್ವಯ ಅಗತ್ಯವಿದೆ ಎಂದು ತಹಶೀಲ್ದಾರ್ ತಿಳಿಸಿದರು.
ಆರೋಗ್ಯ ಇಲಾಖೆಯು ಆರ್ಸಿಎಚ್ ಪೋರ್ಟಲ್ನಲ್ಲಿರುವ ಅಗತ್ಯ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡು, ಬಾಲ್ಯವಿವಾಹ ಸೇರಿದಂತೆ ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಹಕರಿಸಬೇಕು ಎಂದು ಸೂಚಿಸಿದರು.
ಶಾಲಾ-ಕಾಲೇಜುಗಳು ಹಾಗೂ ವಸತಿನಿಲಯಗಳಲ್ಲಿ ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಹಾಗೂ ‘ಗುಡ್ ಟಚ್–ಬ್ಯಾಡ್ ಟಚ್’ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿದರು.
ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಅವರು ಜಿಲ್ಲಾಧಿಕಾರಿಗಳ ನಿರ್ದೇಶನಗಳು, ಕೈಗೊಂಡಿರುವ ಕ್ರಮಗಳು ಹಾಗೂ ಸೇಡಂ ತಾಲೂಕಿನಲ್ಲಿನ ಬಾಲಕಾರ್ಮಿಕ ಸ್ಥಿತಿಗತಿಯ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.






