ಚಿಂಚೋಳಿಯಲ್ಲಿ ಮೇ 25ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ, ಬಸವ ಜಯಂತಿ ಮಹೋತ್ಸವ

ಚಿಂಚೋಳಿ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ರೇಣುಕೇಶ್ವರ ದೇವಸ್ಥಾನ ಆವರಣದಲ್ಲಿ ಮೇ 25ರಂದು ಬೆಳಿಗ್ಗೆ 10 ಗಂಟೆಗೆ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ, ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಮಹಾತ್ಮ ಬಸವೇಶ್ವರ ಜಯಂತಿ ಮಹೋತ್ಸವದ ಜಂಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ ಸಮಿತಿ ಹಾಗೂ ಬಸವೇಶ್ವರ ಜಯಂತ್ಯುತ್ಸವ ಸಮಿತಿ ಅವರುಗಳ ಆಶ್ರಯದಲ್ಲಿ ಈ ಭವ್ಯ ಧರ್ಮಸಭೆ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರರಾದ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಶ್ರೀಶೈಲ ಸೂರ್ಯಸಿಂಹಾಸನಾಧೀಶ್ವರರಾದ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ವಹಿಸಲಿದ್ದಾರೆ.
ಅಲೂರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ. ಕೆಂಚವೃಷಭೇಂದ್ರ ಶಿವಾಚಾರ್ಯರು, ಕೆಸರಟಗಿ ಸಂಸ್ಥಾನದ ಶ್ರೀ ಷ.ಬ್ರ. ತಪೋರತ್ನ ದ್ವಿತೀಯ ಸಾಂಬ ಶಿವಾಚಾರ್ಯರು ಸೇರಿದಂತೆ ಹಲವಾರು ಮಠಾಧೀಶರು ಹಾಗೂ ಪೂಜ್ಯರು ಕಾರ್ಯಕ್ರಮದ ನೇತೃತ್ವ ಮತ್ತು ಸಮ್ಮುಖ ವಹಿಸಲಿದ್ದಾರೆ. ತೊಟ್ನಳ್ಳಿ ಮಹಾಂತೇಶ್ವರ ಮಠದ ಮೂರ್ತಿ ಶಿವಾಚಾರ್ಯರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಬಿ.ಖಂಡ್ರೆ, ಚಿಂಚೋಳಿ ಶಾಸಕ ಡಾ.ಅವಿನಾಶ್ ಉಮೇಶ್ ಜಾಧವ್, ಸಂಸದ ಸಾಗರ ಈಶ್ವರ್ ಖಂಡ್ರೆ, ಮಾಜಿ ಶಾಸಕರಾದ ಸುಭಾಷ್ ಗುತ್ತೇದಾರ, ಸುನೀಲ ವಲ್ಲಾಪುರೆ, ಮಾಜಿ ಸಂಸದ ಡಾ. ಉಮೇಶ್ ಜಾಧವ್ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅನೇಕ ಶಾಸಕರು, ಮಾಜಿ ಶಾಸಕರು ಹಾಗೂ ಹಿರಿಯ ಸಹಕಾರಿ ಧುರೀಣರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷ ಸಂಗಯ್ಯ ಸ್ವಾಮಿ ಆಣವಾರ ವಹಿಸಲಿದ್ದಾರೆ.
ಚಿಂಚೋಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಸ್ತ ಸದ್ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.






