ಕಲ್ಯಾಣ ಕರ್ನಾಟಕ ವಿಮೋಚನೆಗೂ ರಕ್ತಸಿಕ್ತ ಇತಿಹಾಸವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ
ಚಿತ್ತಾಪುರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ; ಧ್ವಜಾರೋಹಣ, ಸಾಧಕರಿಗೆ ಸನ್ಮಾನ

ಚಿತ್ತಾಪುರ: ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತರೆ, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಒಂದು ವರ್ಷದ ಬಳಿಕ 1948ರ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ದೊರೆಯಿತು. ಹೀಗಾಗಿ ಕಲ್ಯಾಣ ಕರ್ನಾಟಕ ವಿಮೋಚನೆಗೂ ರಕ್ತಸಿಕ್ತ ಇತಿಹಾಸವಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದಿಟ್ಟ ನಿರ್ಧಾರದಿಂದ ನಡೆದ ಆಪರೇಷನ್ ಪೋಲೊ ಪೊಲೀಸ್ ಕಾರ್ಯಾಚರಣೆಯ ಮೂಲಕ ಹೈದರಾಬಾದ್ ಕರ್ನಾಟಕ ವಿಮೋಚನೆಗೊಂಡಿತು. ಈ ಇತಿಹಾಸವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅಗತ್ಯ ಎಂದು ಕರೆ ನೀಡಿದರು.
ಉತ್ತಮ ಶಿಕ್ಷಣದ ಮೂಲಕವೇ ಜೀವನದಲ್ಲಿ ಸಾಧನೆ ಸಾಧ್ಯ. 371(ಜೆ) ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಕೆಎಎಸ್, ಪಿಎಸ್ಐ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳು ಹಾಗೂ ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳು ಲಭ್ಯವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ತಾಲೂಕು ಪಂಚಾಯಿತಿ ಇಒ ಮಹಮ್ಮದ್ ಅಕ್ರಂ ಪಾಶಾ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಿರಾದಾರ ಮಾತನಾಡಿದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಲಾದ ವಿಶ್ವಕರ್ಮ, ದೇವಿಂದ್ರ ಅಣಕಲ್, ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್, ಸಿಪಿಐ ಎಸ್.ಸಿ ಪಾಟೀಲ್, ಪಿಎಸ್ಐ ಮಂಜುನಾಥ ರೆಡ್ಡಿ, ನಾಗರೆಡ್ಡಿ ಗೋಪಸೇನ್, ಪಂಡಿತ್ ಸಿಂಧೆ, ಮೈನೋದ್ದಿನ್, ರಾಜಣ್ಣ ಕರದಾಳ ಸೇರಿದಂತೆ ಇತರರು ಇದ್ದರು.
ಶಂಕರ ಕಣ್ಣಿ ನಿರೂಪಿಸಿ, ವಂದಿಸಿದರು.






