ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’; ಆ.19ರಂದು ಸೇಡಂನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸೇಡಂ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರು ‘ಶುದ್ಧೀಕರಣ’ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಇಡೀ ದೇಶಕ್ಕೆ ಕಳಂಕ ತರುವಂತಹದ್ದು ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ ಮಾಲಿಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಸೇಡಂ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶವು ಚಂದ್ರ, ಮಂಗಳ ಗ್ರಹಗಳನ್ನು ತಲುಪುತ್ತಿರುವ ಸಂದರ್ಭದಲ್ಲಿ ಇಂತಹ ಅನಿಷ್ಟ ಆಚರಣೆಗಳಿಗೆ ಜೀವ ನೀಡುತ್ತಿರುವುದು ಖಂಡನೀಯ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನಾಯಕ ಹಾಗೂ ಮುತ್ಸದ್ದಿಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಹಾಗೂ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಕಲಂ 371(ಜೆ) ಜಾರಿಗೊಳಿಸುವ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅಂತಹ ಹಿರಿಯ ನಾಯಕನಿಗೆ ಅವಮಾನ ಮಾಡಿರುವುದು ಜನತೆಗೆ ನೋವುಂಟು ಮಾಡಿದೆ ಎಂದು ಹೇಳಿದರು.
ಆ.19ರಂದು ಕಾಂಗ್ರೆಸ್ ಪ್ರತಿಭಟನೆ :
ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಗಸ್ಟ್ 19ರಂದು ಬೆಳಿಗ್ಗೆ 11 ಗಂಟೆಗೆ ಸೇಡಂ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಬಳಿಕ ಬಸವೇಶ್ವರ ವೃತ್ತದಲ್ಲಿ ಒಂದು ಗಂಟೆ ಕಾಲ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ನಾಗೇಶ್ವರರಾವ ಮಾಲಿಪಾಟೀಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಊಡಗಿ, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾ, ಸೈಯ್ಯದ್ ನಾಜಿಮೊದ್ದಿನ್, ಅಬ್ದುಲ್ ಗಫೂರ, ಅಶೋಕ ಮಹಾಡಿಕ್, ಜಗದೀಶಸ್ವಾಮಿ, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಜಗನ್ನಾಥ ಚಿಂತಪಳ್ಳಿ, ಸೇಡಂ ಬ್ಲಾಕ್ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಸತೀಶ ಪೂಜಾರಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿಲಾಸಗೌತಂ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮಹ್ಮದ್ ಗೌಸ್, ಮುಧೋಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಾಬಾ ಲಿಂಗಂಪಲ್ಲಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.






