Wadi | ವಿಬಿಜಿ ರಾಮ್ಜಿ ಯೋಜನೆಯಡಿ ಕೆಲಸ ನೀಡುವಂತೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ವಾಡಿ: ಸಮೀಪದ ಇಂಗಳಗಿ ಗ್ರಾಮದಲ್ಲಿ ವಿಬಿಜಿ ರಾಮ್ಜಿ ಯೋಜನೆಯಡಿ ಕಾರ್ಮಿಕರಿಗೆ ಸಮರ್ಪಕವಾಗಿ ಉದ್ಯೋಗ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇಂಗಳಗಿ ಗ್ರಾಮದಲ್ಲಿ ಸುಮಾರು 1,000 ಕೂಲಿ ಕಾರ್ಮಿಕರಿದ್ದು, ವಿಬಿಜಿ ರಾಮ್ಜಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ದೊರೆಯದ ಕಾರಣ ಉದ್ಯೋಗ ಅರಸಿ ಮಹಾನಗರಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸವಿಲ್ಲದೆ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಉದ್ಯೋಗ ನೀಡದಿದ್ದರೆ ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಮಹಿಳಾ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ನರೇಗಾ ಯೋಜನೆಯಡಿ ಇಂಗಳಗಿ ಗ್ರಾಮದಲ್ಲಿ ಪ್ರತಿವರ್ಷ ಸುಮಾರು 40 ಸಾವಿರ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ ವಿಬಿಜಿ ರಾಮ್ಜಿ ಯೋಜನೆ ಜಾರಿಯಾದ ಬಳಿಕ ಗ್ರಾಮದಲ್ಲಿ ಕೆರೆಗಳಿಲ್ಲ ಎಂಬ ಕಾರಣ ನೀಡಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೃಷಿ ಹೊಂಡ ಸೇರಿದಂತೆ ವೈಯಕ್ತಿಕ ಕಾಮಗಾರಿಗಳ ಮೂಲಕ ಗ್ರಾಮದ ಎಲ್ಲ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಸಮುದಾಯ ಆಧಾರಿತ ಕಾಮಗಾರಿಗಳನ್ನು ರೂಪಿಸಿ ಎಲ್ಲ ಕಾರ್ಮಿಕರಿಗೂ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ನಾಲವಾರ, ಲಾಡ್ಲಾಪುರ ಹಾಗೂ ದಂಡೋತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿಬಿಜಿ ರಾಮ್ಜಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆ. ಆದರೆ ಇಂಗಳಗಿ ಗ್ರಾಮದಲ್ಲಿ ಮಾತ್ರ ಕೆರೆಗಳಿಲ್ಲ ಎಂಬ ನೆಪ ಹೇಳಿ ಕಾರ್ಮಿಕರನ್ನು ಉದ್ಯೋಗದಿಂದ ವಂಚಿಸುವುದು ಸರಿಯಲ್ಲ ಎಂದು ಸಂಘದ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.
ಗ್ರಾಮದ ಸರ್ವೆ ನಂ. 25ರಲ್ಲಿ 5 ಎಕರೆ, ಸರ್ವೆ ನಂ. 163ರಲ್ಲಿ 9.21 ಎಕರೆ ಹಾಗೂ ಸರ್ವೆ ನಂ. 116ರಲ್ಲಿ 161 ಎಕರೆ ಗಾಯರಾಣು ಜಮೀನಿದೆ. ಅಧಿಕಾರಿಗಳು ಈ ಜಮೀನುಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ಕೆರೆ ನಿರ್ಮಾಣ ಸೇರಿದಂತೆ ಸಮುದಾಯ ಆಧಾರಿತ ಕಾಮಗಾರಿಗಳನ್ನು ಕೈಗೊಂಡು ಕಾರ್ಮಿಕರಿಗೆ ಉದ್ಯೋಗ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೆಪಿಆರ್.ಎಸ್ ಗ್ರಾಮ ಘಟಕದ ಅಧ್ಯಕ್ಷೆ ಶಿಲ್ಪಾ ತೆಳಗೆರಿ, ಕಾರ್ಯದರ್ಶಿ ನಾಗಮ್ಮ ಪೂಜಾರಿ, ಮಮತಾ ನಾಟೀಕಾರ, ಖದೀರ್ ಪಾಶಾ, ಶಿವಕುಮಾರ ಹೂಗಾರ್, ಲಕ್ಷ್ಮೀ ಪೂಜಾರಿ, ಮಂಜುನಾಥ ಕರದಳ್ಳಿ ಭಾಗವಹಿಸಿದ್ದರು.






