Yedrami | ಇಜೇರಿ ಗ್ರಾಮದಲ್ಲಿ ಚರಂಡಿ ಕಾಮಗಾರಿ ವೇಳೆ ಪೈಪ್ ಹಾನಿ : ಪೈಪ್ಲೈನ್ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಯಡ್ರಾಮಿ: ತಾಲೂಕಿನ ಇಜೇರಿ ಗ್ರಾಮದ ವಾರ್ಡ್ ನಂ.2ರಲ್ಲಿ ಚರಂಡಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ಲೈನ್ ಒಡೆದು ನಾಲ್ಕು ದಿನ ಕಳೆದರೂ ದುರಸ್ತಿ ಮಾಡದಿರುವುದರಿಂದ 150ಕ್ಕೂ ಹೆಚ್ಚು ಕುಟುಂಬಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಾರ್ಡ್ನಲ್ಲಿ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ಕುಟುಂಬಗಳು ವಾಸವಾಗಿದ್ದು, ಕಳೆದ ಐದು ತಿಂಗಳಿಂದ ಶ್ರೀ ಹಜರತ್ ಖಾಜಾ ಅಮೀನೋದ್ದೀನ್ ದರ್ಗಾದಿಂದ ಹಳ್ಳದವರೆಗೆ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಕುಡಿಯುವ ನೀರಿನ ಪೈಪ್ಲೈನ್ ಹಾನಿಗೊಳಗಾಗಿದ್ದರೂ ಇದುವರೆಗೆ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದ ಕುಡಿಯುವ ನೀರಿಗಾಗಿ ದೂರದ ವಾರ್ಡ್ಗಳಿಗೆ ತೆರಳಿ ನೀರು ತರುವಂತಾಗಿದ್ದು, ಇತರೆ ಬಳಕೆಗೆ ಚರಂಡಿ ಕಾಮಗಾರಿಗಾಗಿ ಅಗೆದಿರುವ ನಾಲೆಯಲ್ಲಿ ಸಂಗ್ರಹವಾಗಿರುವ ನೀರನ್ನು ಬಳಸುವ ಅನಿವಾರ್ಯತೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿ ಬಸವರಾಜ ಮಾತನಾಡಿ, ಚರಂಡಿ ಕಾಮಗಾರಿ ವೇಳೆ ಒಡೆದ ಪೈಪ್ಲೈನ್ನ್ನು ತಕ್ಷಣ ದುರಸ್ತಿ ಮಾಡದ ಕಾರಣ ವಾರ್ಡ್ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಮಾಹಿತಿ ನೀಡಿದರೂ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಡೆದಿರುವ ಪೈಪ್ಲೈನ್ನ್ನು ಕೂಡಲೇ ದುರಸ್ತಿ ಮಾಡಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಇಲ್ಲವಾದರೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.






