ಕಾಸರಗೋಡು: ನಿವೃತ್ತ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಆತ್ಮಹತ್ಯೆ

ಕಾಸರಗೋಡು: ಜಿಲ್ಲೆಯ ಹಲವು ಪ್ರಮುಖ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತನಿಖಾಧಿಕಾರಿ, ನಿವೃತ್ತ ಸಬ್ ಇ ಇನ್ ಸ್ಪೆಕ್ಟರ್ ಧನ್ ರಾಜ್ (65) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕಣ್ಣೂರು ಮೂಲದ ಮುರಳೀಧರನ್ ಅವರ ಪುತ್ರರಾದ ಧನ್ ರಾಜ್, ನಿವೃತ್ತಿಯ ನಂತರ ಕಾಸರಗೋಡಿನ ಪಾರಕಟ್ಟೆ ಎಂಬಲ್ಲಿ ಸ್ವಂತ ಮನೆ ಕಟ್ಟಿ ವಾಸಿಸುತ್ತಿದ್ದರು. ಸೋಮವಾರ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ದಕ್ಷ ತನಿಖಾಧಿಕಾರಿ:
ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಧನ್ ರಾಜ್ ಅತ್ಯಂತ ಚಾಣಕ್ಷ ಮತ್ತು ದಕ್ಷ ತನಿಖಾಧಿಕಾರಿ ಎಂದು ಹೆಸರುವಾಸಿಯಾಗಿದ್ದರು. ಅವರು ಕಾಸರಗೋಡು ಕ್ರೈಂ ಬ್ರಾಂಚ್ ಘಟಕದಿಂದ ಸೇವೆಯಿಂದ ನಿವೃತ್ತರಾಗಿದ್ದರು.
ನಿವೃತ್ತಿಯ ನಂತರ ಅವರು ಚೆರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯೂರಿಟಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಅನಾರೋಗ್ಯದ ಕಾರಣದಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಅವರು ಆ ಕೆಲಸವನ್ನು ಬಿಟ್ಟಿದ್ದರು ಎನ್ನಲಾಗಿದೆ.






