ಗ್ರಾಮ ಮಟ್ಟದಿಂದ ಕಾಂಗ್ರೆಸ್ ಸಂಘಟನೆ ಬಲಪಡಿಸಲು ಅಭಿಪ್ರಾಯ ಸಂಗ್ರಹ: ಎನ್.ಎಸ್.ಬೋಸರಾಜ್

ಕುಕನೂರು: ಕಾಂಗ್ರೆಸ್ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಎಐಸಿಸಿ ರಾಜ್ಯಾದ್ಯಂತ ಅಭಿಪ್ರಾಯ ಸಂಗ್ರಹ ನಡೆಸುತ್ತಿದ್ದು, ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಸಂಘಟನಾ ಪುನರ್ರಚನೆ ಕೈಗೊಳ್ಳಲಾಗುವುದು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಹೇಳಿದರು.
ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ವೀಕ್ಷಕ ವಿವೇಕ್ ಬನ್ಸಲ್ ನೇತೃತ್ವದ ತಂಡ ಕಾರ್ಯಕರ್ತರು, ಮುಖಂಡರು, ಮಾಧ್ಯಮ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ, ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳನ್ನು ಮತ್ತಷ್ಟು ಬಲಪಡಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಯಾವುದೇ ಒಬ್ಬ ವ್ಯಕ್ತಿಯನ್ನು ಅವಲಂಬಿಸದ ಸಂಘಟನೆಯನ್ನು ರೂಪಿಸುವ ಉದ್ದೇಶದಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ. ಸಂಗ್ರಹವಾಗುವ ಅಭಿಪ್ರಾಯಗಳ ಆಧಾರದ ಮೇಲೆ ಒಂದರಿಂದ ಆರು ಹೆಸರುಗಳನ್ನು ಎಐಸಿಸಿಗೆ ಸಲ್ಲಿಸಲಾಗುವುದು. ಅದರ ಆಧಾರದ ಮೇಲೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮುಂದುವರಿಕೆ ಅಥವಾ ಬದಲಾವಣೆ ಸೇರಿದಂತೆ ಸಂಘಟನೆಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರ ಆಶಯದಂತೆ 50 ರಿಂದ 60 ವರ್ಷದೊಳಗಿನ ಯುವ ನಾಯಕರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತು ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ ಎಂದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಅಂತಿಮ ಹಂತದಲ್ಲಿದ್ದು, ಸಚಿವರ ಆಯ್ಕೆಯಲ್ಲಿ ಜಾತಿ, ಉಪಜಾತಿ, ಮಹಿಳೆಯರು, ಯುವ ನಾಯಕರು ಹಾಗೂ ಪ್ರಾದೇಶಿಕ ಸಮತೋಲನಕ್ಕೆ ಆದ್ಯತೆ ನೀಡಲಾಗುವುದು. ಅಂತಿಮ ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅನುಮೋದನೆ ನೀಡಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಪೀಳಿಗೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಅವರ ಅನುಭವ ಹಾಗೂ ನಾಯಕತ್ವ ಕಾಂಗ್ರೆಸ್ಗೆ ಮುಂದೆಯೂ ಅಗತ್ಯವಾಗಿದ್ದು, ಪಕ್ಷದ ಮಾರ್ಗದರ್ಶನದಲ್ಲಿ ಅವರ ಪಾತ್ರ ಮುಂದುವರಿಯಲಿದೆ ಎಂದರು.
ತಮ್ಮ ರಾಜಕೀಯ ಭವಿಷ್ಯದ ಕುರಿತು ಮಾತನಾಡಿದ ಬೋಸರಾಜ್, ವಿಧಾನ ಪರಿಷತ್ ಸದಸ್ಯರಾಗಿ ಇನ್ನೂ ನಾಲ್ಕು ವರ್ಷಗಳ ಅವಧಿ ಉಳಿದಿದ್ದು, ಚುನಾವಣೆಗೆ ಸ್ಪರ್ಧಿಸುವ ಉದ್ದೇಶ ಇಲ್ಲ. ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ಬರ ಘೋಷಣೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪವನ್ನು ತಳ್ಳಿಹಾಕಿದ ಅವರು, ಬರ ಘೋಷಣೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ತಾಂತ್ರಿಕ ಮಾನದಂಡಗಳ ಪ್ರಕಾರವೇ ನಡೆಯುವ ಪ್ರಕ್ರಿಯೆಯಾಗಿದೆ. ಸರ್ಕಾರ ಮಳೆ ಪ್ರಮಾಣ ಹಾಗೂ ಹವಾಮಾನ ವರದಿಗಳ ಆಧಾರದ ಮೇಲೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬರ ಪರಿಶೀಲನಾ ಸಭೆಗೆ ಕೆಲ ನಾಯಕರು ಗೈರಾಗಿರುವುದನ್ನು ರಾಜಕೀಯ ಭಿನ್ನಾಭಿಪ್ರಾಯ ಎಂದು ಬಿಂಬಿಸುವುದು ಸರಿಯಲ್ಲ ಎಂದರು.
ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಸಭೆಗೆ ಹಾಜರಾಗಿರಲಿಲ್ಲ. ಶಾಸಕ ರಾಘವೇಂದ್ರ ಹಿಟ್ನಾಳ್ ಪಕ್ಷದ ಹಾಗೂ ವೈಯಕ್ತಿಕ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದರಿಂದ ಸಭೆಗೆ ಬರಲು ಸಾಧ್ಯವಾಗಲಿಲ್ಲ. ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷ ಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿದ್ದು, ಅಪಪ್ರಚಾರಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






