ಯಾವುದೇ ಧಾರ್ಮಿಕ ಮಂದಿರದಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ : ಸುರೇಶ ಇಟ್ನಾಳ

ಕೊಪ್ಪಳ, ನ.11: ಜಿಲ್ಲೆಯಲ್ಲಿ ಹಿಂದೂ, ಮುಸ್ಲಿಮ್ ಮತ್ತು ಕ್ರೈಸ್ತ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ್ ಹೇಳಿದ್ದಾರೆ.
ಮಂಗಳವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ ‘‘ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016 ಹಾಗೂ ಹದಿಹರೆಯದ ಮಕ್ಕಳ ಸಬಲೀಕರಣ ಕುರಿತು ವಿವಿಧ ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹವನ್ನು ಮಾಡಿಸಿದ ಪಾಸ್ಟರ್(ಪಾದ್ರಿ)ರವರಿಗೆ ಶಿಕ್ಷೆಯಾಗಿದೆ. ಕಲ್ಯಾಣ ಮಂಟಪಗಳ ಮಾಲಕರು, ಸಾಮೂಹಿಕ ವಿವಾಹ ಆಯೋಜಕರ ವಿರುದ್ಧವೂ ಸಹ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ತಾವುಗಳು ಬಾಲ್ಯವಿವಾಹದಲ್ಲಿ ಭಾಗವಹಿಸಬೇಡಿ ಮತ್ತು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಅವಕಾಶ ನೀಡಬೇಡಿ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೆ. ರಾಘವೇಂದ್ರ ಭಟ್ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಕುರಿತು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ತರಬೇತಿಯನ್ನು ನೀಡಿದರು.
ಮಕ್ಕಳ ಬಾಲ್ಯವು ಅತ್ಯಮೂಲ್ಯವಾದದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯು ತೀವ್ರವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಅವರ ಹಕ್ಕುಗಳನ್ನು ಅನುಭವಿಸುವಂತಹ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಜಾರಿಯಲ್ಲಿರುವ ಕಾನೂನಿನ್ವಯ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಸಹ ಅತ್ಯಾಚಾರವಾಗಿರುತ್ತದೆ. ಆದ್ದರಿಂದ ಬಾಲ್ಯ ವಿವಾಹಗಳಲ್ಲಿ ಭಾಗವಹಿಸಬೇಡಿ, ಬಾಲ್ಯವಿವಾಹಗಳಿಗೆ ಅವಕಾಶವನ್ನು ನೀಡಬೇಡಿ ಮತ್ತು ಕಾಯ್ದೆಯ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಿ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ, ಕೊಪ್ಪಳ ಡಿವೈ.ಎಸ್ಪಿ ಮುತ್ತಣ್ಣ ಸವರಗೋಳ, ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಬೆಳಗಾವಿ ಸ್ಪಂದನ ಸೊಸೈಟಿ ಕಾರ್ಯದರ್ಶಿ ಸುಶೀಲಾ ವಿ. ಮತ್ತು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮೂಹಿಕ ವಿವಾಹ ಆಯೋಜಕರು, ಪೂಜಾರಿಗಳು, ಮೌಲ್ವಿಗಳು, ಪಾದ್ರಿಗಳು, ಡೇಕೊರೇರ್ಸ್, ಛಾಯಾಚಿತ್ರಗಾರರು, ಮುದ್ರಣಕಾರರು, ಕಲ್ಯಾಣ ಮಂಟಪಗಳ ಮಾಲಕರ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.







